ಕೋಲಾರ: ಜಿಲ್ಲೆಯಲ್ಲಿ ಜೂ.7ರಂದು ಕೆ.ಸಿ. ವ್ಯಾಲಿ ಉದ್ಘಾಟನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಗಮಿಸುತ್ತಿರುವ ಹಿನ್ನೆಲೆ ಸೋಮವಾರ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
ಮುಖ್ಯಮಂತ್ರಿಗಳು ಅಂದು ಕೆ.ಸಿ.ವ್ಯಾಲಿ ನೀರು ಬರುತ್ತಿರುವ ಲಕ್ಷ್ಮಿಸಾಗರ ಕೆರೆಗೆ ಬೇಟಿ ನೀಡಿ ನಂತರ ನರಸಾಪುರದ ಬಳಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ 20 ಸಾವಿರ ಜನರು ಬರುತ್ತಾರೆ ಎಂದು ಮಾಹಿತಿ ಬಂದಿದ್ದು, ಭದ್ರತೆಯ ದೃಷ್ಟಿಯಿಂದ ರಸ್ತೆ ಮಾರ್ಗವನ್ನು ಪರಿಶೀಲಿಸಬೇಕು ಎಂದು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ತಿಳಿಸಿದರು.
ಆರೋಗ್ಯ ಇಲಾಖೆಯವರು ಅಂಬ್ಯೂಲೆನ್ಸ್ ವ್ಯವಸ್ಥೆಯನ್ನು ಒದಗಿಸಬೇಕು. ಬೆಸ್ಕಾಂ ಇಲಾಖೆಯವರು ವೇದಿಕೆ ಕಾರ್ಯಕ್ರಮಕ್ಕೆ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯಮಂತ್ರಿಗಳು ಭೇಟಿ ನೀಡುವ ಸ್ಥಳಗಳಾದ ಲಕ್ಷ್ಮಿಸಾಗರ ಕೆರೆ ಮತ್ತು ವೇದಿಕೆ ಕಾರ್ಯಕ್ರಮಕ್ಕೆ ಸಮರ್ಪಕ ರಸ್ತೆ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ , ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪ ವಿಭಾಗಾಧಿಕಾರಿ ಶುಭಾ ಕಲ್ಯಾಣ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

