ಬಂಟ್ವಾಳ: ಅವಿಭಜಿತ ಜಿಲ್ಲೆಯ ಬಿಜೆಪಿ ಶಾಸಕರು, ಪೇಜ್ ಪ್ರಮುಖರು ಹಾಗೂ ಜನಪ್ರತಿನಿಧಿಗಳ ಸಮಾವೇಶ ಜೂ. 12ರಂದು ಬೆಳಗ್ಗೆ 10ರಿಂದ ಸಂಜೆ ತನಕ ಇಲ್ಲಿನ ಬ್ರಹ್ಮರಕೂಟ್ಲು ಸಮೀಪದ ಬಂಟರ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಹೇಳಿದ್ದಾರೆ.
ಬಿ.ಸಿ.ರೋಡ್ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.
ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಇಲ್ಲಿನ ಬಿಜೆಪಿ ಚುನಾವಣಾ ಪ್ರಭಾರಿ, ಶಾಸಕ ಸಿ.ಟಿ.ರವಿ ಸಹಿತ ಅವಿಭಜಿತ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಪಾಲ್ಗೊಳ್ಳುವರು. ಅಂದು ಮಧ್ಯಾಹ್ನ 1ರವರೆಗೆ ಸಭಾ ಕಾರ್ಯಕ್ರಮ, ಕಾರ್ಯಕರ್ತರಿಗೆ ಅಭಿನಂದನೆ, ಮಧ್ಯಾಹ್ನ ಬಳಿಕ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಮಾತನಾಡಿ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಆಕಸ್ಮಿಕವಲ್ಲ. ಕಳೆದ 2013ರ ಬಳಿಕ ಬಿಜೆಪಿ ಕಾರ್ಯಕರ್ತರ ಭೇಟಿ ಮತ್ತು ಗ್ರಾಮ ಭೇಟಿ, ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ ನಾಯ್ಕ್ ಅವರು ಜನರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದರಿಂದ ಅವರಿಗೆ ಗೆಲುವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಯತ್ ಸದಸ್ಯ ಎಂ. ತುಂಗಪ್ಪ ಬಂಗೇರ, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ್, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ಮೋನಪ್ಪ ದೇವಸ್ಯ, ರಮಾನಾಥ ರಾಯಿ, ವಕೀಲ ರಾಜಾರಾಮ ನಾಯಕ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜಾ, ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ ಮತ್ತಿತರರು ಇದ್ದರು.

