ಕೈಕಂಬ: ಇಲ್ಲಿಗೆ ಸಮೀಪದ ಬೆಳ್ಳಿಬೆಟ್ಟುವಿನಿಂದ ಪೊಳಲಿಯ ನೂಯಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಈ ರಸ್ತೆಯನ್ನು ಹಾದು ಹೋಗಿ ತೋಡು ಇದ್ದು ಇದಕ್ಕೆ ಮೋರಿಗಳನ್ನು ಅಳವಡಿಸಲಾಗಿತ್ತು. ಆದರೆ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮೋರಿ ಕುಸಿದು ರಸ್ತೆ ಬಿದ್ದುಹೋದ ಕಾರಣ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರ ಅಸಾಧ್ಯವಾಗಿದೆ.
ಈ ರಸ್ತೆಯ ಅಭಿವೃದ್ಧಿಗೆ ಗ್ರಾಮೀಣ ಅಭಿವೃದ್ಧಿ ಇಲಾಖೆಯ ವತಿಯಿಂದ 25 ಲಕ್ಷ ರೂ. ಬಿಡುಗಡೆಯಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಕಾರಣ ರಸ್ತೆಯ ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಗುರುಪುರ ಗ್ರಾಮ ಪಂಚಾಯತ್ ಪಿಡಿಓ ಅಬೂಬಕ್ಕರ್ ಅವರು ಈ ರಸ್ತೆಗೆ ಪಂಚಾಯತ್ ವತಿಯಿಂದ ಕಲ್ಲುಗಳನ್ನು ನಿರ್ಮಿಸಿ ತಾತ್ಕಾಲಿಕ ರಸ್ತೆ ನಿರ್ಮಿಸಿ ಕೊಡಲಾಗುವುದು. ಆ ಬಳಿಕ ಗ್ರಾಮೀಣ ಅಭಿವೃದ್ಧಿ ಇಲಾಖೆಯ ವತಿಯಿಂದ ರಸ್ತೆ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಲು ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕಿಯಾ, ಉಪಾಧ್ಯಕ್ಷ ಜಿ.ಎಂ. ಉದಯ ಭಟ್, ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ ಸ್ಥಳ ಪರಿಶೀಲನೆ ನಡೆಸಿ ತಾತ್ಕಾಲಿಕ ಪರಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ರಸ್ತೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ.
