ಮೂಡುಬಿದಿರೆ : ಅಭಿವೃದ್ಧಿ ಹೊಂದುತ್ತಿರುವ ಮೂಡುಬಿದಿರೆಯನ್ನು ಸ್ವಚ್ಛ, ಸುಂದರ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಇಲ್ಲಿನ ಭ್ರಷ್ಟಾಚಾರ ವಿರೋಧ ಜಾಗೃತ ಸೇವಾದಳದ ವತಿಯಿಂದ ಚಿಂತನ ಮಂಥನ ಕಾರ್ಯಕ್ರಮವು ಜು. 14 ರಂದು ಬೆಳಿಗ್ಗೆ 10.30 ಕ್ಕೆ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಸೇವಾದಳದ ಅಧ್ಯಕ್ಷ ಹರಿಪ್ರಸಾದ್ ನಾಯಕ್ ತಿಳಿಸಿದ್ದಾರೆ.

ಅವರು ಬುಧವಾರ ಪ್ರೆಸ್ಕ್ಲಬ್ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಚಿಂತನ ಮಂಥನದಲ್ಲಿ ಬೃಹತ್ ಯೋಜನೆ ಹಾಗೂ ಕಟ್ಟಡ ನಿಯಮಾವಳಿಗಳು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ಬಸ್ ಡಿಪೋ, ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಒಳಚರಂಡಿ ವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಮತ್ತು ರೈಲು ಸಂಪರ್ಕ, ಸರ್ಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜು, ಪೋಲೀಸರಿಗೆ ಸೂಕ್ತ ವಸತಿ ವ್ಯವಸ್ಥೆ ಕುರಿತು ಚರ್ಚಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಪುರಸಭಾಧ್ಯಕ್ಷೆ ಹರಿಣಾಕ್ಷಿ ಎಸ್ ಸುವರ್ಣ, ಸಿಪಿಐಎಂ ಮುಖಂಡ ಯಾದವ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಸಾಣೂರು ಸತೀಶ್ ಸಾಲ್ಯಾನ್ ಭಾಗವಹಿಸಲಿದ್ದು ಕಂದಾಯ ಇಲಾಖೆ, ಪುರಸಭೆ, ಯೋಜನಾ ಪ್ರಾಧಿಕಾರ, ಕೆಎಸ್ಆರ್ಟಿಸಿ, ಜಿಲ್ಲಾ ಆರೋಗ್ಯಾಧಿಕಾರಿ, ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಪ್ರತಿನಿಧಿಗಳು, ಇಂಜಿನಿಯರಿಂಗ್, ವೈದ್ಯರು, ವಕೀಲರು, ಸಾಹಿತಿಗಳು, ದೈಹಿಕ ಶಿಕ್ಷಣ ತರಬೇತಿದಾರರು, ಶಿಕ್ಷಕರು, ಸಮಾಜ ಸೇವಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪದ್ಮನಾಭ ಶೆಟ್ಟಿ, ದಯಾನಂದ ನಾಯ್ಕ್, ರಮೇಶ್ ಬೋಧಿ ಮತ್ತಿತರರು ಉಪಸ್ಥಿತರಿದ್ದರು.
