ಮೂಡಬಿದಿರೆ: ಮೂಡಬಿದಿರೆ ತಾಲೂಕು ಮಟ್ಟದ 2018ನೇ ಸಾಲಿನ ಚೆಸ್ ಪಂದ್ಯಾವಳಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಲ್ಕಿ- ಮೂಡುಬಿದಿರೆ ಕ್ಷೇತ್ರದ ಶಾಸಕ ಕೆ. ಉಮಾನಾಥ ಕೋಟ್ಯಾನ್ ಮಾತನಾಡಿ, ಭಾರತೀಯ ಪರಂಪರೆಯ ಆಟವಾದ ಚೆಸ್ ಮನಸ್ಸನ್ನು ಸದೃಢಗೊಳಿಸುವುದಲ್ಲದೆ ಕೌಶಲ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಡುಬಿದಿರೆಯ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಎಮ್ ಮಾತನಾಡಿ, ಕಲಿಕೆಯೊಂದಿಗೆ ಚೆಸ್ನಂತಹ ಕ್ರೀಡೆಗಳಲ್ಲಿ ಮಕ್ಕಳು ಬೆರೆತಾಗ ಉತ್ತಮ ಸಂತುಲಿತ ವ್ಯಕ್ತಿತ್ವದ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಕ್ರೀಡೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ನಂತರ ಪ್ರಥಮ ಬಾರಿಗೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳಿಗೆ ಆಗಮಿಸಿದ ಉಮಾನಾಥ ಕೋಟ್ಯಾನ್ ಇವರನ್ನು ಸಂಸ್ಥೆಯ ವತಿಯಿಂದ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಇವರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರಾದ ಗುರುಪ್ರಸಾದ್ ಶೆಟ್ಟಿ ಇವರು ಸ್ವಾಗತಿಸಿ, ದೈಹಿಕ ಶಿಕ್ಷಕರಾದ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ವಂದಿಸಿದರು.
