ಬಂಟ್ವಾಳ: ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ತಾಲೂಕು ಪಂಚಾಯಿತಿ ಸದಸ್ಯ ಅವರಿಂದ ತೆರವುಗೊಂಡ ಸ್ಥಾನಕ್ಕೆ ಇದೇ 28ರಂದು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಭಾಕರ ಪ್ರಭು ಅವರಿಗೆ ಅಪಪ್ರಚಾರದಿಂದ ಗೆಲುವಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಆರೋಪಿಸಿದ್ದಾರೆ.
ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ.ರಮಾನಾಥ ರೈ ಅವರು ಸಂಗಬೆಟ್ಟು ಮತ್ತು ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಸ್ವತಃ ತಾನೇ ಮಾಡಿರುವುದಾಗಿ ಬಿಜೆಪಿ ಅಭ್ಯರ್ಥಿ ಪ್ರಭಾಕರ ಪ್ರಭು ಸುಳ್ಳು ಮತ್ತು ಅಪಪ್ರಚಾರದ ಮೂಲಕ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಸುಂದರ್ ಶಾಂತಿ ಅವರಿಗೆ ಇದರಿಂದಾಗಿ ತಾತ್ಕಾಲಿಕ ಸೋಲು ಅನುಭವಿಸುವಂತಾಗಿದೆ.
ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದುಡಿದ ಎಲ್ಲಾ ಕಾರ್ಯಕತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
