ಮೂಡುಬಿದಿರೆ: ಕೇಂದ್ರ ಸರಕಾರದ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೆಣ್ಣು ಮಕ್ಕಳನ್ನು ರಕ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆನ್ನುವ ನಿಟ್ಟಿನಲ್ಲಿ ರಾಜ್ಯದ ಸುತ್ತಲೂ ಸಂಚರಿಸುತ್ತಿರುವ ಭೇಟಿ ಬಚಾವೋ-ಭೇಟಿ ಪಡಾವೋ ಜಾಗೃತಿ ಜಾಥಾವು ಶುಕ್ರವಾರ ಮೂಡುಬಿದಿರೆ ಆಗಮಿಸಿತ್ತು.

ಇಲಾಖೆಯ ಮೇಲ್ವೀಚಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೂಡುಬಿದಿರೆ ಬಸ್ ನಿಲ್ದಾಣದ ಆವರಣದಲ್ಲಿ ಜಾಥಾವನ್ನು ಬರಮಾಡಿಕೊಂಡರು. ಸಮುದಾಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಅವರು ಜಾಥಾವನ್ನುನ್ನುದ್ದೇಶಿಸಿ ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಿಸಿ ಆಕೆಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಆಕೆಯನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸೀತಾರಾಮ ಆಚಾರ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. “ಭೇಟಿ ಬಚಾವೋ-ಭೇಟಿ ಪಡಾವೋ ಎಂಬ ಕೇಂದ್ರ ಸರ್ಕಾರದ ಯೋಜನೆಯನ್ನು ಇಲಾಖೆಯು ಕಾರ್ಯಗತಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ವಲಯದ ಮೇಲ್ವೀಚಾರಕಿ ಕಾತ್ಯಾಯಿನಿ, ಶಿರ್ತಾಡಿ ವಲಯದ ರತಿ ಶೆಟ್ಟಿ, ಕಲ್ಲಮುಂಡ್ಕೂರು ವಲಯದ ಭಾರತಿ ಹಾಗೂ ಬೆಳುವಾಯಿಯ ಶುಭ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
