ಮೂಡುಬಿದಿರೆ: ರೈತರ ಅನುಕೂಲಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಘೋಷಿಸಿದ ಯೋಜನೆಗಳ ಶೀಘ್ರ ಅನುಷ್ಠಾನ ಮತ್ತು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಜೂನ್ 11ರಂದು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಅಧ್ಯಕ್ಷ ಲಿಯೋ ವಾಲ್ಟರ್ ನಝರತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜೂನ್ 11ಕ್ಕೆ ಬೆಳಗ್ಗೆ 10 ಗಂಟೆಗೆ ಕಲ್ಸಂಕ ರಸ್ತೆಯಿಂದ ಮುಖ್ಯರಸ್ತೆಯಲ್ಲಿ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ಬಳಿಕ ನಡೆಯುವ ಪ್ರತಿಭಟನಾ ಸಭೆಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಲಿದ್ದಾರೆ ಎಂದರು.
ಬೆಲೆ ಸಾಲ ಮನ್ನಾ ಮೊತ್ತವನ್ನು ತಕ್ಷಣ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಅಡಿಕೆ ಕೊಳೆ ರೋಗಕ್ಕೆ ತಕ್ಷಣ ಪರಿಹಾರ ನೀಡಬೇಕು. ಭತ್ತದ ಬೆಳೆಗಾರರಿಗೆ ಘೋಷಿಸಿದ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಬೆಳೆ ರಕ್ಷಣೆಗೆ ನವಿಲು ಪಾರ್ಕ್ ಮತ್ತು ಮಂಕಿ ಪಾರ್ಕ್ ನಿರ್ಮಿಸಬೇಕು. ಭಾರತಕ್ಕೆ ಆಮದು ಆಗುತ್ತಿರುವ ಕಳಪೆ ಗುಣಮಟ್ಟದ ಕಾಳು ಮೆಣಸು ಮತ್ತು ಅಡಿಕೆಯನ್ನು ನಿಷೇಧಿಸಬೇಕು. ಹೈನುಗಾರಿಕೆಗೆ ಪ್ರತಿ ಲೀಟರ್ಗೆ ರೂ 50 ದರ ನಿಗದಿಪಡಿಸಬೇಕು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ವಯ ಸಿಗುವ ರೂ. 6,000 ಹಣವನ್ನು ಎಲ್ಲಾ ರೈತರಿಗೆ ನೀಡಬೇಕೆಂದು ಅವರು ಆಗ್ರಹಿಸಿದರು.
ಮೂಡುಬಿದಿರೆಯ ಕೆಲವೆಡೆ ವಸತಿ ಸಮುಚ್ಚಯ, ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ಹರಿದು ಕೃಷಿ ಭೂಮಿ ನಾಶವಾಗುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ರೋನಿ ಮೆಂಡೋನ್ಸಾ ಪುರಸಭೆಯನ್ನು ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಮೀನ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

