ಬಂಟ್ವಾಳ: ಒಂದೇ ದೇಶ ಒಂದೇ ಶಿಕ್ಷಣ ಜಾರಿಗಾಗಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಜುಲೈ 21 ರಂದು ಬಂಟ್ವಾಳದ ಪೊಳಲಿ ಕ್ಷೇತ್ರದಿಂದ ಹೊರಟ ಭಾರತ ಶಿಕ್ಷಣ ರಥಯಾತ್ರೆ ರಾಷ್ಟ್ರ ರಾಜಧಾನಿ ದೆಹಲಿ ತಲುಪಿದೆ.
ಕಳೆದ ಹತ್ತು ದಿನಗಳ ಅವಧಿಯಲ್ಲಿ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಹರಿಯಾಣ ರಾಜ್ಯಗಳಲ್ಲಿ ಸಂಚರಿಸಿದ ರಥಯಾತ್ರೆ ಶಿಕ್ಷಣ ಜಾಗೃತಿಯನ್ನು ಮೂಡಿಸಿದೆ. ಆಗಸ್ಟ್ 1 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಸತ್ಯಾಗ್ರಹ ನಡೆಯಲಿದ್ದು ಈ ಸಂದರ್ಭ ರಾಜ್ಯದ ವಿವಿಧ ಭಾಗಗಳ ಶಿಕ್ಷಣ ಪ್ರೇಮಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಂಟ್ವಾಳ ಜೇಸಿಐ ಸಂಸ್ಥೆ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಅದರ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಧರಣಿಯಲ್ಲಿ ಸೇರಿಕೊಳ್ಳಲಿದ್ದಾರೆ.
ಸಂಸದರ ಭೇಟಿ:
ಭಾರತ ಶಿಕ್ಷಣ ರಥಯಾತ್ರೆಯ ತಂಡದ ಸದಸ್ಯರು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ದೆಹಲಿಯ ಮಹಾದೇವ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ಬಳಿಕ ಮನವಿ ಸಲ್ಲಿಸಿತು. ಈ ಸಂದರ್ಭ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್,ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಸದಸ್ಯ ರಾಮಚಂದ್ರ ಪೂಜಾರಿ ಕರೆಂಕಿ ಮೊದಲಾದವರು ಹಾಜರಿದ್ದರು. ಬಳಿಕ ಜಂತರ್ ಮಂತರ್ ನಲ್ಲಿ ಸಿದ್ದತೆಯನ್ನು ಪರಿಶೀಲಿಸಲಾಯಿತು.


