|
ಬಂಟ್ವಾಳ: ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವಿದ್ಯಾರ್ಥಿಗಳ ಯಾವುದೇ ಬೇಡಿಕೆಗಳನ್ನು ಆಡಳಿತ ಮಂಡಳಿ ಈಡೇರಿಸುತ್ತಿಲ್ಲ ಎಂದು ಆರೋಪಿಸಿ ಬಂಟ್ವಾಳ ಎಸ್ವಿಎಸ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳ ಪ್ರತಿಭಟನೆ ಎರಡನೇ ದಿನ ಪ್ರತಿಭಟನೆ ಕಾಲಿಟ್ಟಿದೆ. ಕಾಲೇಜಿನ ವಿದ್ಯಾರ್ಥಿ ನಾಯಕ ಹರ್ಷಿತ್ ಅವರ ನೇತೃತ್ವದಲ್ಲಿ ಬೆಳಿಗ್ಗೆನಿಂದಲೇ ತರಗತಿಯನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಸಂಜೆಯ ವರೆಗೂ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿ ಯೂನಿಯನ್ ಪದಾಧಿಕಾರಿಗಳ ಜೊತೆ ಸಂಧಾನಕ್ಕೆ ಮುಂದಾದರು ಆದರೆ ವಿದ್ಯಾರ್ಥಿ ಸಮೂಹದ ಮುಂದೆಯೆ ತಮ್ಮ ಬೇಡಿಕೆಯನ್ನು ಈಡೇರಿಸುವ ಸ್ಪಷ್ಟ ಭರವಸೆ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಮುಂದುವರಿಯಿತು.
ಮಂಗಳವಾರ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ಬಳಿಕ ಜಿಲ್ಲಾಧಿಕಾರಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಗೆ ದೂರು ಕೂಡ ನೀಡಿದ್ದಾರೆ. ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳ ದೂರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು,ವಿ.ವಿ.ಯಲ್ಲು ರಜೆಯಲ್ಲಿ ತೆರಳಿರುವ ಕುಲಪತಿಗಳು ಬಂದಾಕ್ಷಣ ಈ ಬಗ್ಗೆ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕಾಲೇಜಿನ ಪ್ರವೇಶದ ವೇಳೆ ಎಲ್ಲಾ ರೀತಿಯ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯಲಾಗುತ್ತಿದೆ. ಆದರೆ, ಇಲ್ಲಿ ಕನಿಷ್ಟ ಮಟ್ಟದ ಸೌಲಭ್ಯವೂ ಇಲ್ಲ ಎಂದು ಗಂಭೀರ ಆರೋಪವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ಆಡಳಿತ ಮಂಡಳಿ ಬೇಡಿಕೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ತಮ್ಮ ಎಲ್ಲಾ ಬೇಡಿಕೆ ಈಡೇರುವ ತನಕವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಗುರುವಾರವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.
Attachments area
|

