ಬಂಟ್ವಾಳ: ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರ ಎಲ್ಲ ಜಿಲ್ಲೆಗಳ ಎಸ್ಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ಸೋಮವಾರ ರಾತ್ರಿ ಶಾಸಕ ರಾಜೇಶ್ ನಾಯ್ಕ್ ಅವರ ಬಿ.ಸಿರೋಡಿನಲ್ಲಿರುವ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತ ಕಾಪಾಡಲು ಸರಕಾರ ಬದ್ಧವಾಗಿದ್ದು, ಪೋಷಕರೂ ಶಾಲೆಯಲ್ಲಿನ ಸಮಸ್ಯೆಗಳ ಕುರಿತು ಧೈರ್ಯದಿಂದ ಸರಕಾರದ ಗಮನಕ್ಕೆ ತರಬಹುದು ಎಂದರು.
ಸರಕಾರಿ ಶಾಲೆಗಳ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಪರ ವಿರೋಧದ ಮಾತುಗಳು ಕೇಳಿ ಬರುತ್ತಿದ್ದು, ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಅಧಿವೇಶನ ಮುಗಿದಾಕ್ಷಣ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಆಂಗ್ಲ ಮಾದ್ಯಮದ ಕುರಿತು ಹಿರಿಯ ಸಾಹಿತಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಪೋಷಕರು ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಸರಕಾರ ಎಲ್ಲರ ಅಭಿಪ್ರಾಯ ಪಡೆಯಲಿದ್ದು, ಒಂದನೇ ತರಗತಿಯಿಂದ ಇಂಗ್ಲಿಷ್ ವಿಷಯ ಕಲಿಕೆಗೆ ಎಲ್ಲರ ಸಹಮತ ಇದೆ ಎಂದರು. ವಿದ್ಯಾರ್ಥಿಗಳಿಗೆ ವಿತರಿಸುವ ಸೈಕಲ್ ಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಕಾರ ಪಡೆದು ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಗೆಗಾಗಿ ೬ ಮತ್ತು ೮ನೇ ತರಗತಿಯಲ್ಲಿ ವಿಶೇಷ ಪರೀಕ್ಷೆ ನಡೆಸುವ ಚಿಂತನೆ ಇದೆ. ಬ್ಯಾಗ್ ಗಳು ವಿದ್ಯಾರ್ಥಿಗಳಿಗೆ ಹೊರೆಯಾಗುವ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸುವ ನಿಟ್ಟಿನಲ್ಲಿ ನೋ ಬ್ಯಾಗ್ ಡೇ ನಡೆಸುವ ಚಿಂತನೆ ಇದೆ ಎಂದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ,ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾಸದಸ್ಯ ಗೋವಿಂದ ಪ್ರಭು, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು,ಪುರುಷೊತ್ತಮ ಶೆಟ್ಟಿ ವಾಮದಪದವು ಮೊದಲಾವರಿದ್ದರು.

