ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರ ಪ್ರೇಮ ಬೆಳೆಸಬೇಕು. ದೇಶ ಕಟ್ಟುವ ಸಂಕಲ್ಪ ಕೈಗೊಳ್ಳುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಏಕತೆಯ ಸಂಕೇತವಾಗಿದ್ದಾರೆ. ಅವರ ಅವಿರತ ಶ್ರಮ ಹಾಗೂ ದೃಢ ಸಂಕಲ್ಪದ ಪರಿಣಾಮವಾಗಿ ಭಾರತ ಒಂದು ವಿಶಾಲ ದೇಶವಾಗಿ ಉಳಿಯಲು ಸಾಧ್ಯವಾಯಿತು ಎಂದು ಹೇಳಿದರು.
ಮಕ್ಕಳು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಧೈರ್ಯ ಹಾಗೂ ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗುರುವಾರ ನಿವೃತ್ತರಾದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇಣುಕಮ್ಮ ಅವರನ್ನು ಸನ್ಮಾನಿಸಿದರು. ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಹಶೀಲ್ದಾರ್ ಕೆ.ಎನ್.ಸುಜಾತ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬಿಜೆಪಿ ಮುಖಂಡರಾದ ಡಾ. ಕೆ.ಎನ್.ವೇಣುಗೋಪಾಲ್ ಜಯರಾಮರೆಡ್ಡಿ, ಎಂ.ಲಕ್ಷ್ಮಣಗೌಡ, ವೆಂಕಟೇಗೌಡ, ರೆಡ್ಡಪ್ಪ, ಹೊದಲಿ ನಾರಾಯಣಸ್ವಾಮಿ, ಕೊಟ್ರಗುಳಿ ನಾರಾಯಣಸ್ವಾಮಿ, ಯಲ್ದೂರು ಪದ್ಮನಾಭ್, ಸುಗಟೂರು ಚಲಪತಿ, ರಾಮಾಂಜಿ, ಸುನಿಲ್ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Attachments area

