ಬಂಟ್ವಾಳ: ನರಿಕೊಂಬು ಗ್ರಾಮದ ದೆಂಜಿಪಾಡಿ ರಾಜಕಾಲುವೆಯಲ್ಲಾಗಿರುವ ಒತ್ತುವರಿಯನ್ನು ಮಳೆಗಾಲಕ್ಕೆ ಮುನ್ನ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬಂಟ್ವಾಳ ಘಟಕದ ಬೆಂಬಲದೊಂದಿಗೆ ಬಂಟ್ವಾಳ ತಹಶೀಲ್ದಾರರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ. ನಾಯಿಲ ದಲ್ಲಿ ಬಂಟ್ವಾಳ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಥಳೀಯ ರೈತರು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 
ನರಿಕೊಂಬು ಗ್ರಾಮದ ನಾಯಿಲ ಪ್ರದೇಶದ ರೈತರು ಕಳೆದ ಹಲವಾರು ವರ್ಷಗಳಿಂದ ಮಳೆಗಾಲದಲ್ಲಿ ದೆಂಜಿಪಾಡಿ ರಾಜಕಾಲುವೆ ಒತ್ತುವರಿಯಿಂದಾಗಿ ಕೃಷಿ ಭೂಮಿಯಲ್ಲಿ ನೀರು ನಿಂತು ಭತ್ತ ,ಅಡಿಕೆ, ತೆಂಗು ಕೃಷಿಗೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗುತ್ತಿದೆ.ಈ ಬಗ್ಗೆ ಬಂಟ್ವಾಳ ಪುರಸಭೆ, ದ.ಕ. ಜಿಲ್ಲಾಧಿಕಾರಿ, ಬಂಟ್ವಾಳ ತಹಶೀಲ್ದಾರ್, ಜಿಲ್ಲಾ ಉಸ್ತುವಾರಿ ಸಚಿವ,ಕ್ಷೇತ್ರದ ಶಾಸಕ ನರಿಕೊಂಬು ಗ್ರಾಮಪಂಚಾಯಿತ್ ಗೆ ಲಿಖಿತ ಮನವಿ ನೀಡಲಾಗಿದ್ದರೂ ಈತನಕ ರೈತರ ಸಮಸ್ಯೆ ಪರಿಹಾರ ಆಗಿರುವುದಿಲ್ಲ ಎಂದು ಸಭೆಯಲ್ಲಿ ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಮಳೆಗಾಲಕ್ಕೆ ಮುಂಚಿತವಾಗಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಕಾಲುವೆಯ ಹೂಳನ್ನು ತೆಗೆದು ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಿ ರೈತರ ಕೃಷಿ ಭೂಮಿಯನ್ನು ಉಳಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ ತೀರ್ಮಾನಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸುವುದೆಂದು ನಿರ್ಧರಿಸಲಾಯಿತು. ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುದೇಶ್ ಮಯ್ಯ, ರೈತ ಮುಖಂಡರಾದ ರಾಮಚಂದ್ರ ರಾವ್, ಸೂರಜ್, ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು.
