ಬಂಟ್ವಾಳ: ಇದೇ ತಿಂಗಳ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತೆಗೆ ಸಂಬಂಧಿಸಿ ಪೂರ್ವಬಾವಿ ಸಭೆಯು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಭಾಭವನದಲ್ಲಿ ಮಂಗಳವಾರ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸಭಾಧ್ಯಕ್ಷತೆ ವಹಿಸಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಕರ ಜೊತೆಗೆ ಇತರ ಇಲಾಖಾಧಿಕಾರಿಗಳು ಕೂಡ ಸಹಕರಿಸುವಂತೆ ಸೂಚಿಸಿದರು. ಬಂಟ್ವಾಳ ತಾಲೂಕಿನಲ್ಲಿ 5,200 ವಿದ್ಯಾರ್ಥಿಗಳು 17 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪ್ರತಿಯೊಂದು ಪರೀಕ್ಷಾಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ,ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.ಈ ವ್ಯವಸ್ಥೆಗಳಿಗೆ ಶಿಕ್ಷಕರಿಗೆ ಪ್ರತ್ಯೇಕ ಜವಬ್ದಾರಿಯನ್ನು ನೀಡಲಾಯಿತು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಹೆತ್ತವರು ಯಾವುದೇ ರೀತಿಯಲ್ಲಿ ಭಯಭೀತರಾಗುವ ಅವಶ್ಯಕತೆಯಿಲ್ಲ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಹಶೀಲ್ದಾರರಾದ ರಶ್ಮಿ ಎಸ್.ಆರ್, ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.
