ಬಂಟ್ವಾಳ: ಮುಂದಿನ ೧೦ ವರ್ಷಗಳಲ್ಲಿ ಪುದು ಗ್ರಾಮದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಗ್ರಾಮಕ್ಕೆ ಪಿಯುಸಿ, ಪದವಿ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹೇಳಿದರು.ಅವರು ಮಂಗಳವಾರ ಪುದು ಗ್ರಾಮದ ಸುಜೀರು ಮಾದರಿ ಹಿ.ಪ್ರಾ.ಶಾಲೆಯ ೪ ತರಗತಿ ಕೊಠಡಿಗಳ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.

ಸುಜೀರು ಶಾಲೆಯ ಶಿಥಿಲವಾದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವುದು ಬಹುಕಾಲದ ಬೇಡಿಕೆಯಾಗಿದ್ದು, ಅದಕ್ಕೆ ಅನುದಾನ ಒದಗಿಸಲಾಗಿದೆ. ಜತೆಗೆ ಗ್ರಾಮದ ರಸ್ತೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಮಾಜಿ ಸದಸ್ಯ ಉಮ್ಮರ್ ಫಾರೂಕ್, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೊ, ಶಿಕ್ಷಣ ಇಲಾಖೆಯ ಸುಶೀಲ, ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ, ತಾ.ಪಂ.ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಗ್ರಾ.ಪಂ.ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕಿ ವಿಶಾಲಾಕ್ಷಿ ಸ್ವಾಗತಿಸಿದರು. ಶಿಕ್ಷಕಿ ಸುಮನಾ ಕಾರ್ಯಕ್ರಮ ನಿರ್ವಹಿಸಿದರು.
