ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟುವಿನಲ್ಲಿ ಅನುಷ್ಠಾನಗೊಂಡಿರುವ ಪುರಸಭಾ ವ್ತಾಪ್ತಿಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ರೇಚಕ ಸ್ಥಾವರದಲ್ಲಿನ ತಾಂತ್ರಿಕ ತೊಂದರೆಗಳನ್ನು ತಕ್ಷಣ ಸರಿ ಪಡಿಸಬೇಕು ಮತ್ತು ಈ ಯೋಜನೆಯ ಬಾಕಿ ಕಾಮಗಾರಿಗಳನ್ನು ಮುಂದಿನ 1 ತಿಂಗಳಲ್ಲಿ ಸಂಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶುಕ್ರವಾರ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಸಹಿತ ಅಧಿಕಾರಿಗಳ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದು,ನಂತರ ಯೋಜನೆಯ ಪೂರ್ತಿ ನಿರ್ವಹಣೆಯನ್ನು ಪುರಸಭೆ ನಿರ್ವಹಿಸುವಂತೆ ನಿರ್ದೇಶಿಸಿದರು. 
ಪುರಸಭಾ ವ್ಯಾಪ್ತಿಯಲ್ಲಿ ಈ ಯೋಜನೆಯಡಿ 90 ಕಿ.ಮೀ ಪೈಪ್ ಲೈನ್ ಕಾಮಗಾರಿ ಮುಗಿದಿದ್ದು ,ಬಾಕಿ ಇರುವ ಸುಮಾರು 75 ಕಿ.ಮೀ ಪೈಪ್ ಲೈನ್ ವಿಸ್ತರಣೆಗಾಗಿ ಈಗಾಗಲೇ ರೂ.40 ಕೋ.ರೂ. ಅನುದಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಮಂಜೂರಾತಿ ಹಂತದಲ್ಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಇದೇ ವೇಳೆ ತಿಳಿಸಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ ಭಟ್ ,ಮಂಗಳೂರು ವಿಭಾಗ ಸಹಾಯಕ ಆಯುಕ್ತ ಮದನ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಸಹಾಯಕ ಅಭಿಯಂತರರಾದ ಶೋಭಲಕ್ಷ್ಮಿ, ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಅಭಿಯಂತರ ಡೊಮಿನಿಕ್ ಡಿ’ಮೆಲ್ಲೊರವರು ಉಪಸ್ಥಿತರಿದ್ದರು.

ಅದರಂತೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಸಹಿತ ಅಧಿಕಾರಿಗಳ ತಂಡ ಜಕ್ರಿಬೆಟ್ಟು ರೇಚಕ ಸ್ಥಾವರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಶಾಸಕರ ನೇತೃತ್ವದಲ್ಲಿ . ಬಂಟ್ವಾಳ ಪ್ರವಾಸಿ ಬಂಗಲೆಯಲ್ಲಿ ಈ ಸಭೆ ನಡೆಯಿತು.
