ಬಂಟ್ವಾಳ: ಸರಕಾರದ ಅಸಮರ್ಪಕ ಧೋರಣೆ ಮತ್ತು ಆಡಳಿತದಿಂದ ದೇಶದಲ್ಲಿ ಆರ್ಥಿಕ ಮುಗ್ಗಟ್ಟು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ನ್ಯಾಯವಾದಿ, ನೋಟರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಪೂಜಾರಿ ಆರೋಪಿಸಿದ್ದಾರೆ.
ಕೊರೊನಾ ಸಂದರ್ಭ ಕೇಂದ್ರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಮಾಡಿದ್ದು, ಇದರಿಂದ ನಿರ್ಮಾಣವಾದ ಆರ್ಥಿಕ ಪರಿಸ್ಥಿತಿ ಪರಿಹರಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪರಿಣಾಮ ದೇಶದ ವ್ಯಾಪಾರ ವಹಿವಾಟು ಸೇರಿದಂತೆ ಸಂಪೂರ್ಣ ಜನಜೀವನ ಕಷ್ಟವಾಗಿದೆ. ಬ್ಯಾಂಕ್ ಸಾಲ ಮಾಡಿ ಮನೆ ನಿರ್ಮಾಣ, ವ್ಯಾಪಾರ, ಸಣ್ಣ ಉದ್ಯಮ ಮಾಡಿಕೊಂಡಿರುವ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಕೆಲವು ತಿಂಗಳು ವಿನಾಯಿತಿ ಘೋಷಿಸಿದ್ದು, ಆಗಸ್ಟ್ ತಿಂಗಳ ಅಂತ್ಯಕ್ಕೆ ಮುಗಿಯಲಿದೆ. ಬಾಕಿ ಉಳಿಸಿಕೊಂಡಿರುವ ಸಾಲಗಾರರು ಸೆಪ್ಟೆಂಬರ್ ತಿಂಗಳಿಂದ ಸಾಲ ಮರುಪಾವತಿ ಮಾಡಬೇಕು. ಕೊಟ್ಟ ವಿನಾಯಿತಿಗೆ ಕಂತಿನ ಬಡ್ಡಿಯನ್ನು ಕಟ್ಟಬೇಕಾಗಿದೆ. ಇದರಿಂದ ಸಾಲಗಾರರು ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
