ದಡ್ಡಲಕಾಡು:ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪ್ರೌಢಶಾಲಾ ವಿಭಾಗವನ್ನು ಉದ್ಘಾಟಿಸಿದರು. ಬಳಿಕ ನಡೆದ ಸರಳ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಅನುಕೂಲತೆ ಹೆಚ್ಚಾದಂತೆ ಪೈಪೋಟಿಯೂ ಹೆಚ್ಚಾಗುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶ ಇಂದಿನ ವಿದ್ಯಾರ್ಥಿಗಳಿಗೆ ಇದೆ. ಅಂತಹ ವ್ಯವಸ್ಥೆಯನ್ನು ದಡ್ಡಲಕಾಡಿನಂತಹ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಕಲ್ಪಿಸಿದೆ ಎಂದರು.
ಪ್ರಕಾಶ್ ಅಂಚನ್ ಅವರ ನೇತೃತ್ವದಲ್ಲಿ ಊರವರ ಸಹಕಾರದೊಂದಿಗೆ ದಡ್ಡಲಕಾಡು ಸರಕಾರಿ ಶಾಲೆ ಮಾದರಿ ಶಾಲೆಯಾಗಿ ಬೆಳೆದು ನಿಂತಿದೆ. ಸರಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನ ಪ್ರಕಾಶ್ ಅಂಚನ್ ನಿಸ್ವಾರ್ಥವಾಗಿ, ಶಾಲೆಯ ಅಭಿವೃದ್ಧಿಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದಾರೆ ಎಂದರು.ಶಾಲಾ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್ ಪ್ರಾಸ್ತಾವಿಕವಾಗಿ ಮಾತನಾಡಿ ದಡ್ಡಲಕಾಡು ಶಾಲೆಗೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಂಜೂರಾಗುವಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಯತ್ನ ಅಪಾರ. ಮುಂದಿನ ಹಂತದಲ್ಲಿ ಶಾಲೆಯ ಸಭಾಂಗಣ ಹಾಗೂ ಅಕ್ಷರ ದಾಸೋಹ ಕಟ್ಟಡಕ್ಕೆ ಸರಕಾರದಿಂದ ಅನುದಾನ ಒದಗಿಸುವಂತೆ ಅವರು ವಿನಂತಿಸಿಕೊಂಡರು.
ಇದೇ ಸಂದರ್ಭ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಡ್ಡಲಕಾಡು ಶಾಲೆಗೆ ಎರಡು ಹಾಗೂ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಶಾಲೆಗೆ ಒಂದು ಬಸ್ಸನ್ನು ಕೊಡುಗೆಯಾಗಿ ನೀಡಲಾಯಿತು. ಬಸ್ಸಿನ ಕೀಲಿಕೈಯನ್ನು ಶಾಸಕರು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ಶಾಲೆಯ ನೂತನ ಸಭಾಂಗಣದ ಉಳಿದ ಕಾಮಗಾರಿ ಹಾಗೂ ಅಕ್ಷರ ದಾಸೋಹದ ಕಟ್ಟಡದ ಅನುದಾನಕ್ಕೆ ಶಾಸಕರಿಗೆ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಶಿಕ್ಷಕರನ್ನು ಒದಗಿಸುವಂತೆ ಡಿಡಿಪಿಐ ಅವರಿಗೆ ಬೇಡಿಕೆಯ ಮನವಿಯನ್ನು ಸಲ್ಲಿಸಲಾಯಿತು.
ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದ ಪದ್ಮಾವತಿ ಬಿ. ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಡಿಡಿಪಿಐ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ , ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯೋಪಾಧ್ಯಾಯಿನಿ ಅನಿತಾ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಮೌರಿಸ್ ಡಿಸೋಜಾ, ಎಸ್ ಡಿ ಎಂ ಸಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
