ಮಂಗಳೂರು: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಂಗಳವಾರ ಬೆಳಗಿನ ಜಾವ ರಸ್ತೆ ಉರುಳಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಗ್ಯಾಸ್ ಟ್ಯಾಂಕರ್ ರಸ್ತೆಗೆ ಉರುಳಿದ ಪರಿಣಾಮ ವಾಹನ ಸಂಚಾರವನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ಅಗ್ನಿಶಾಮಕದಳವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವಿಧ ಭಾಗದಲ್ಲಿ ಬುಡೋಳಿ ಯೂತ್ ಫೆಡರೇಶನ್,ಸೂರಿಕುಮೇರು ಬದ್ರಿಯಾ ಯಂಗ್ ಮೆನ್ಸ್ ಸದಸ್ಯರು, ಸಾರ್ವಜನಿಕರು ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.
ಇದುವರೆಗೂ ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಇನ್ನೂ ಮಸೀದಿ ಧ್ವನಿ ವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳಸದಂತೆ ಸೂಚನೆ ನೀಡಲಾಗಿದೆ.

