ಶ್ರೀನಿವಾಸಪುರ: ಫಲಾನುಭವಿಗಳು ಲೋಕ್ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು. ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು. ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಂಗ ಇಲಾಖೆ ವತಿಯಿಂದ ಏರ್ಪಡಿಸಿದ್ದ ಲೋಕ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಅವುಗಳನ್ನು ತೆರೆದ ಮನಸ್ಸಿನಿಂದ ಚರ್ಚಿಸಿ ಇತ್ಯರ್ಥಪಡಿಸಿಕೊಂಡಲ್ಲಿ ಹಣ ಹಾಗೂ ಸಮಯದ ಉಳಿತಾಯವಾಗುತ್ತದೆ. ಮಾನಸಿಕ ನೆಮ್ಮದಿಯೂ ಸಿಗುತ್ತದೆ ಎಂದು ಹೇಳಿದರು.
ಅದಾಲತ್ನಲ್ಲಿ ೫೦೦ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡವರ ಮುಖದಲ್ಲಿ ಸಂತೋಷ ತುಂಬಿತ್ತು. ಕೃತಜ್ಞತಾ ಭಾವದಿಂದ ಹಿಂದಿರುಗಿದರು. ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಕಾರ್ಯದರ್ಶಿ ರೂಪವತಿ, ಮಾಜಿ ಅಧ್ಯಕ್ಷರಾದ ವೆಂಕಟೇಶ್, ಜಯರಾಮೇಗೌಡ, ವಕೀಲರಾದ ಕೃಷ್ಣಪ್ಪ, ನಿನಯ್ ಕುಮಾರ್, ಅರ್ಜುನ್, ನಾಗರಾಜ್, ಶಿವಶಂಕರ್ ಇದ್ದರು.
