ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸೋಮವಾರ ಕನ್ನಡಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ಸೋಂಕು ತಡೆಗಟ್ಟುವ ಸರಿಯಾದ ವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ರೋಗ ಲಕ್ಷಣಗಳು ಬಂದಾಗಲೇ ಸೂಕ್ತ ಚಿಕಿತ್ಸೆ ಪಡೆಯಲು ಪ್ರೇರೇಪಿಸಬೇಕು. ಕೊರೊನಾ ವಿರುದ್ಧ ಕಾರ್ಯಾಚರಿಸಲು ಆಳ್ವಾಸ್ ಹೆಲ್ತ್ ಸೆಂಟರ್ ನ ಲಭ್ಯ ವೈದ್ಯಕೀಯ ತಂಡವನ್ನು ನಿಯೋಜಿಸಲಾಗುವುದು. ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಹೋಮಿಯೋಪಥಿ ಔಷಧಿಯನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನಾವು ನಮ್ಮನ್ನು ರಕ್ಷಿಸಿಕೊಳ್ಳುವುದರೊಂದಿಗೆ ಇತರರನ್ನು ರಕ್ಷಿಸಬೇಕು. ಸರ್ಕಾರ ಜನತಾ ಕಪ್ರ್ಯೂ ವಿಧಿಸಿರುವುದರಿಂದ ಬದುಕು ಮತ್ತಷ್ಟು ಕಠಿಣವಾಗಲಿದ್ದು ಇದನ್ನು ಎದುರಿಸಬೇಕು ಎಂದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸಲಹಗಳನ್ನು ನೀಡಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಮಾಹಿತಿ ನೀಡಿ ತಾಲೂಕಿನಲ್ಲಿ ಪ್ರಸ್ತುತ 120 ಪ್ರಕರಣಗಳು ಸಕ್ರಿಯವಾಗಿದ್ದು ಈ ಪೈಕಿ 92 ಮಂದಿ ಮನೆಯಲ್ಲಿ ಹಾಗೂ 22 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1120 ಮಂದಿ ಲಸಿಕೆ ಪಡೆದುಕೊಂಡಿದ್ದು ಇನ್ನೂ 16 ಸಾವಿರ ಮಂದಿಗೆ ಬಾಕಿಯಿದೆ ಎಂದು ಮಾಹಿತಿ ನೀಡಿದರು.
ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ವೃತ್ತನಿರೀಕ್ಷಕ ದಿನೇಶ್ಕುಮಾರ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ, ಇಲಾಖೆ ಕೈಗೊಂಡ ಕಾರ್ಯಯೋಜನೆಗಳ ವಿವರ ನೀಡಿದರು. ತಹಸೀಲ್ದಾರ್ ಪುಟ್ಟುರಾಜು, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಜಿ.ಪಂ.ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾಧ್ಯಕ್ಷ ಪ್ರಸಾದ್ಕುಮಾರ್, ತಾ.ಪಂ ಅಧ್ಯಕ್ಷೆ ರೇಖಾ ಸಾಲ್ಯಾನ್, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಸ್ಥಳೀಯ ಉದ್ಯಮಿ ಶ್ರೀಪತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೆಡಿಎಸ್ ಮುಖಂಡ ದಿವಾಕರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪ್ರೆಸ್ಕ್ಲಬ್ ಅಧ್ಯಕ್ಷ ವೇಣುಗೋಪಾಲ್ ಮತ್ತಿತರರು ಸಲಹೆ ನೀಡಿದರು. ಗೋಪಾಲ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.
