ಬೆಂಗಳೂರು :ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ಬೊಮ್ಮಾಯಿ ಹೇಳಿದ್ದಾರೆ.
ನೂತನ ಸಿಎಂ ಆದ ಬಸವರಾಜ ಬೊಮ್ಮಾಯಿಗೆ ಈಗ ಸಚಿವ ಸಂಪುಟ ರಚನೆ ಭಾರೀ ತಲೆ ನೋವಾಗಿ ಪರಿಣಮಿಸಿದೆ. ಅದರಲ್ಲೂ ಹಿರಿಯ ಮುಖಂಡರು ತಮಗೆ ಸ್ಥಾನ ನೀಡಲೇ ಬೇಕು ಎಂದು ಪಟ್ಟು ಹಿಡಿದು ಕುಳಿತಂತಿದೆ.
ನನಗೆ ಈಗ ತಕ್ಷಣಕ್ಕೆ ಮಳೆ ಪ್ರವಾಹ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡು ಮುಂದಿನ ಕೆಲಸ ಮಾಡುವುದು, ಮಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಇದಕ್ಕಾಗಿ ಇಂದು ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿದ್ದೇನೆ, ಪ್ರವಾಹ ಪೀಡಿತ ಸ್ಥಳಗಳಿಗೆ ಕೂಡ ಭೇಟಿ ನೀಡುತ್ತೇನೆ ಎಂದು ಮಾಹಿತಿ ನೀಡಿದರು.
ಇನ್ನು ಬಿಜೆಪಿ ವರಿಷ್ಠರು ಸಮಯ ನೀಡಿದರೆ ದೆಹಲಿಗೆ ಭೇಟಿ ನೀಡಿ ರಾಜ್ಯದ ಬಗ್ಗೆ ಚರ್ಚಿಸುವೆ. ಬೆಳಗ್ಗೆ ದೆಹಲಿಗೆ ಹೋಗುವ ಯೋಜನೆಯಿದ್ದು ವರಿಷ್ಠರ ಬಳಿ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ, ಆದರೆ ಈ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ. ಮುಂದಿನ ಭೇಟಿ ವೇಳೆ ಚರ್ಚಿಸುವೆ. ನಿನ್ನೆ ಪ್ರಧಾನ ಮಂತ್ರಿಯವರು ಕರೆ ಮಾಡಿ ನನಗೆ ಶುಭಾಶಯ ತಿಳಿಸಿದ್ದಾರೆ ಎಂದು ಹೇಳಿದರು
