ಬಂಟ್ವಾಳ: ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ‘ಬೃಹತ್ ಮಹಿಳಾ ಸಮಾವೇಶ’ದಲ್ಲಿ ಹಿರಿಯ ಮಹಿಳಾ ಕಾಂಗ್ರೆಸ್ಸಿಗರನ್ನು ಸನ್ಮಾನಿಸಲಾಯಿತು. ಕಳೆದ ೭೦ ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವು ಪುರುಷರಿಗೆ ಸಮಾನರಾಗಿ ಎಲ್ಲಾ ಜಾತಿ ಧರ್ಮಗಳ ಮಹಿಳೆಯರನ್ನು ಬೆಳೆಸುತ್ತಾ ಬಂದಿದೆ.
ಅಧಿಕಾರ ಇದ್ದಾಗ ಮತ್ತು ಇಲ್ಲದಿದ್ದರೂ ಮಹಿಳೆಯರು ಸ್ವಸಾಮರ್ಥ್ಯದಿಂದ ಮುಂದೆ ಬಂದು ಪಕ್ಷದ ಏಳಿಗೆ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದಾಗ ನಾವು ನೈಜ ನಾಯಕರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಹೇಳಿದ್ದಾರೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ‘ಬೃಹತ್ ಮಹಿಳಾ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.
ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯ ನರಸಿಂಹ ಮೂರ್ತಿ ಮಾತನಾಡಿ, ಬ್ರಿಟೀಷರು ಮತ್ತು ಬಿಜೆಪಿ ನಡುವೆ ಹೋಲಿಕೆಯಿದೆ. ಬ್ರಿಟಿಷರ ವಿಭಜನೆ ನೀತಿಯನ್ನೇ ಬಿಜೆಪಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಕೇವಲ ಪ್ರಚಾರಕ್ಕೆ ಸೀಮಿತಗೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ‘ಬೇಟಿ ಬಚಾವೋ ಬೇಟಿ ಪಡಾವೋ’ ಎನ್ನುತ್ತಲೇ ಅತ್ಯಾಚಾರಿಗಳ ವಿರುದ್ಧ ನಡೆಯುವ ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದರು.
ಕಾಂಗ್ರೆಸ್ ಯೋಜನೆಗೆ ಬಿಜೆಪಿ ಹೆಸರು: ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಲಿಷ್ಠ ಪಟ್ಟಭದ್ರರಿಂದ ಕೂಡಿದ ಬಿಜೆಪಿ ಸರ್ಕಾರವು ಮಹಿಳೆಯರ ಮೂಲಭೂತ ಸ್ವಾತಂತ್ರ್ಯ ಕಸಿದುಕೊಳ್ಳುವ ಪ್ರಯತ್ನದಲ್ಲಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರೂಪಿಸಿದ್ದ ಜನಪ್ರಿಯ ಯೋಜನೆಗಳಿಗೆ ಹೆಸರು ಬದಲಾಯಿಸಿ ಬಿಜೆಪಿ ಮರೆಯುತ್ತಿದೆ ಎಂದರು.
ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಪಿಸಿಸಿ ಸದಸ್ಯೆ ಮಮತಾ ಎಸ್.ಗಟ್ಟಿ, ವೀಣಾ ಭಟ್, ಅನಿತಾ ಹೇಮನಾಥ ಶೆಟ್ಟಿ, ಧನಭಾಗ್ಯ ಆರ್.ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಮತ್ತಿತರರು ಇದ್ದರು.
ಇದೇ ವೇಳೆ ೧೧ ಮಂದಿ ಹಿರಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಸನ್ಮಾನ, ರಕ್ಷಾಬಂಧನ ಆಚರಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಸ್ವಾಗತಿಸಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವಿಲ್ಮಾ ಮೊರಾಸ್ ವಂದಿಸಿದರು. ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಮತ್ತು ಸ್ನೇಹ ರಿಷಾ ಕಾರ್ಯಕ್ರಮ ನಿರೂಪಿಸಿದರು.
