ಬಂಟ್ವಾಳ: ದೇವಸ್ಥಾನಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಹೇಳಿದರು. ಅವರು ಅ.10ರಂದು ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಪದಗ್ರಹಣ ಮತ್ತು ಕರ್ನಾಟಕ ಬ್ಯಾಂಕ್ ಕೊಡುಗೆಯಾಗಿ ನೀಡಿದ 6 ಲಕ್ಷ ರೂ.ವೆಚ್ಚದ ಸೋಲಾರ್ ದೀಪಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹಕ್ಕೆ ಆಕರ್ಷಿತರಾಗಿ ನಮ್ಮ ದೇಶದ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ದೇವಸ್ಥಾನಗಳಲ್ಲಿ ಬಾಲಗೋಕುಲಗಳ ಆರಂಭಿಸುವ ಬಗ್ಗೆ ಧಾರ್ಮಿಕ ಗ್ರಂಥಗಳಿರುವ ಗಂಥಾಲಯವನ್ನು ಆರಂಭಿಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದ್ದು ಅದರ ಸದುಪಯೋಗವನ್ನು ನಾವು ಪಡೆಯಬೇಕು ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಸೋಲಾರ್ ದೀಪಗಳನ್ನು ಉದ್ಘಾಟಿಸಿದರು. ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರಳ ಸಾಮೂಹಿಕ ವಿವಾಹ, ಗೋಶಾಲೆಗಳ ನಿರ್ಮಾಣ ಮೊದಲಾದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಹಿಂದೂ ಸಮಾಜದ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ಮೊದಲ ಬಾರಿಗೆ ಇಲಾಖೆಯ ಮೂಲಕ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು. ಆಡಳಿತಾಧಿಕಾರಿ ನೋಣಯ್ಯ ನಾಯ್ಕ್, ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ವಾದಿರಾಜ ಕೆ.ಎ., ಸೆಲ್ಕೊ ಸಂಸ್ಥೆಯ ಡಿಜಿಎಂ ಗುರುಪ್ರಸಾದ್ಶೆಟ್ಟಿ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ ,ಉಪಾಧ್ಯಕ್ಷ ಅಜಿತ್ ಶೆಟ್ಟಿ , ಗ್ರಾಮಣಿಗಳಾದ ಗಣೇಶ್ ಮುಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ, ಸಮಿತಿ ಸದಸ್ಯರಾದ ಸೂರ್ಯಹಾಸ ಕೆ., ಪ್ರವೀಣ ಪೂಜಾರಿ, ಆನಂದ ಶೆಟ್ಟಿ, ರಾಘವೇಂದ್ರ ನಾಯ್ಕ, ರಾಧಾಕೃಷ್ಣ ಮಯ್ಯ ಕೆ., ಮಾಲತಿ, ಸುಮನಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಾಖಲೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ನೂತನ ಸಮಿತಿಯ ಪದಗ್ರಹಣ ನಡೆಯಿತು.ನೋಣಯ ನಾಯ್ಕ್,ವಾದಿರಾಜ ಕೆ.ಎ. ಅವರನ್ನು ಸಮ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು.ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ವಂದಿಸಿದರು. ಸಾಯಿಸುಮಾ ನಾವಡ ಕಾರ್ಯಕ್ರಮ ನಿರೂಪಿಸಿದರು
