ಪುತ್ತೂರು: 700 ವರ್ಷಗಳ ಧಾರ್ಮಿಕ ಇತಿಹಾಸವಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 21ರಿಂದ 27ರವರೆಗೆ ದೇವಾಲಯದ ಆಚಾರ್ಯರಾದ ಬ್ರಹ್ಮಶ್ರೀ ಕೆಮ್ಮಿಂಜೆ ರಾಜೇಶ್ ತಂತ್ರಿ ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅನ್ನದಾಸೋಹದೊಂದಿಗೆ ನಡೆಯಲಿದೆ ಎಂದು ಉದ್ಯಮಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ರೈ ತಿಳಿಸಿದರು.
ಅವರು ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರಗಳನ್ನು ನೀಡಿದರು. ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಈ ಹಿಂದೆ ಎರಡು ಬಾರಿ ಮುಂದೂಡಲ್ಪಟ್ಟಿತ್ತು. ಇದೀಗ 14 ವರ್ಷಗಳ ನಂತರ ನಡೆಸಲು ನಿಶ್ಚಯಿಸಲಾದ ಬ್ರಹ್ಮಕಲಶೋತ್ಸವವು ಡಿ. 21ರಿಂದ ನಡೆಯುತ್ತಿದೆ.
ಶ್ರೀ ದೇವಾಲಯದಲ್ಲಿ ರೂ. 2 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಶ್ರೀ ದೇವರ ಗರ್ಭಗುಡಿಯ ಛಾವಣಿಗೆ ತಾಮ್ರದ ಹೊದಿಕೆ ಹೊದಿಸಲಾಗಿದೆ. ವಿವಿಧ ಕಾಮಗಾರಿಗಳನ್ನು ನಿರಂತರವಾಗಿ ನಿರ್ವಹಿಸಲಾಗಿದೆ. ಎಲ್ಲಾ ವ್ಯವಸ್ಥೆಗಳು ಸೇರಿದಂತೆ ಬ್ರಹ್ಮಕಲಶೋತ್ಸವಕ್ಕೆ ಒಟ್ಟು ರೂ. 1.30 ಕೋಟಿ ವೆಚ್ಚವಾಗಲಿದೆ. ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳಿಗೆ ಸಂಬಂಧಿಸಿದಂತೆ ಎಲ್ಲಾ ಮನೆಗಳವರು ಈ ಧಾರ್ಮಿಕ ಕಾರ್ಯಕ್ಕೆ ಪೂರ್ಣ ಬೆಂಬಲ ನೀಡಿದ್ದಾರೆ ಎಂದರು.ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ಡಿ. 20,21, 22,23 ರಂದು ಹಸಿರುವಾಣಿ ಸಮರ್ಪಣೆ ನಡೆಯಲಿದ್ದು ಡಿ. 21 ರಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಹಯೋಗದೊಂದಿಗೆ ಭಜನಾಮೃತ ಕಾರ್ಯಕ್ರಮ ನಡೆಯಲಿದೆ.
ಬ್ರಹ್ಮಕಲಶೋತ್ಸವ ಕಾರ್ಯಾಲಯ, ಪ್ರಾಚ್ಯವಸ್ತು ಪ್ರದರ್ಶನ, ಸಾಕ್ಷ್ಯಚಿತ್ರ ಬಿಡುಗಡೆ ನಡೆಯಲಿದೆ. ಸಭಾ ವೇದಿಕೆಯನ್ನು ಹಿರಿಯರಾದ ಗಿರೀಜಾ ಸಂಜೀವ ರೈ ಉದ್ಘಾಟಿಸಲಿದ್ದು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ದೇವಾಲಯದ ಪ್ರಮುಖರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೇಶವ ಭಂಡಾರಿ ಕೈಪ, ನಿರಂಜನ ರೈ ಮಠಂತಬೆಟ್ಟು, ಗಂಗಾಧರ ಶೆಟ್ಟಿ, ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.
