ನವದೆಹಲಿ: ಮನೆ ಸಮೀಪವಿರುವ ಚರಂಡಿಯನ್ನು ಸ್ವಚ್ಛಗೊಳಿಸುವ ವಿಚಾರದಲ್ಲಿ ಜಗಳವಾಗಿ ನೆರೆಹೊರೆಯವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪುತ್ರನನ್ನು ಚಾಕುವಿನಲ್ಲಿ ಇರಿದು ಕೊಂದಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿದೆ.
ತಿಗಾಂವ್ ಗ್ರಾಮದ ನಿವಾಸಿ ಪಂಕಜ್ ನಗರ್ (26) ಮೃತ ದುರ್ದೈವಿ. ಯುವಕ ಚರಂಡಿಯನ್ನು ಸ್ವಚ್ಛಗೊಳಿಸುವ ಮತ್ತು ಒಳಚರಂಡಿ ನೀರಿನ ಹರಿವಿನ ಬಗ್ಗೆ ನೆರೆಹೊರೆಯವರೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಕೋಪಗೊಂಡು ಆರು ಮಂದಿ ಗುಂಪು ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಗಾಯಗೊಂಡಿದ್ದ ಯುವಕನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ನಿನ್ನೆ ರಾತ್ರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಯ ನಂತರ ಒಂದೇ ಕುಟುಂಬದ ಆರು ಜನ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ತಿಗಾಂವ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
