ಬಂಟ್ವಾಳ : ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಎ.೨೪ರಂದು ಭಾನುವಾರ ನಡೆಯಲಿರುವ ೧೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಪ್ರಗತಿಪರ ಕೃಷಿಕ ಕಟ್ಟೆಮನೆ ಉದಯ ಕುಮಾರ್ ಜೈನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಉದ್ಯಮಿ ಪ್ರವೀಣ ಬಂಗೇರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬಂಟ್ವಾಳ ಮೆಸ್ಕಾಂ ಮುಖ್ಯ ಕಾರ್ಯ ನಿರ್ವಾಹಕ ಅಭಿಯಂತರ ರಾಮಚಂದ್ರ ಅವರು ಮಂಗಳ ವಸ್ತ್ರ ವಿತರಿಸಿದರು.
ಜಿ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ , ಕಟ್ಟೆಮನೆ ವಸಂತ ಕುಮಾರ್ ಜೈನ್, ಕಟ್ಟೆಮನೆ ದಿಲೀಪ್ ಕುಮಾರ್ ಜೈನ್, ಬಂಟ್ವಾಳ ಉಪ ತಹಶೀಲ್ದಾರ್ ದಿವಾಕರ ಮುಗುಳ್ಯ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಶ್ರೀ ರಾಮಾಂಜನೇಯ ಭಜನ ಮಂದಿರದ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ, ಗ್ರಾ.ಪಂ. ಸದಸ್ಯ ಕಾಂತಪ್ಪ ಕರ್ಕೇರ, ಮಾಜಿ ಸದಸ್ಯ ರಮಾನಂದ, ಇರ್ವತ್ತೂರು ಗ್ರಾ.ಪಂ.ಸದಸ್ಯ ದಯಾನಂದ ನಾಯ್ಕ್ ಎಡ್ತೂರು, ಕರುಣಾಕರ ಮಾಳಿಗೆ ಮನೆ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು, ಮಾಜಿ ಅಧ್ಯಕ್ಷ ಮಾಧವ ಬಂಗೇರ ಉಪಸ್ಥಿತರಿದ್ದರು.
ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಮತ್ತು ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು. ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ , ಅಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೨೦ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು. ವಧು-ವರರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ, ವಂದಿಸಿದರು, ಅಮೃತಾ ಎಸ್. ಕಾರ್ಯಕ್ರಮ ನಿರೂಪಿಸಿದರು.
