ನವದೆಹಲಿ: ಟೆಸ್ಲಾ ಖ್ಯಾತಿಯ ಎಲಾನ್ ಮಸ್ಕ್ ಅವರು ಟ್ವಿಟ್ಟರ್ ಖರೀದಿಸಿದ ನಂತರ ಸಾಮಾಜಿಕ ಮಾಧ್ಯಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಮಿತಿ ಬಗ್ಗೆ ವ್ಯಾಪಕ ಚರ್ಚೆಗಳಾಗುತ್ತಿವೆ. ಇದೇ ಸಂದರ್ಭದಲ್ಲಿ ಸಂಸದ ಶಶಿ ತರೂರ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಟ್ವಿಟ್ಟರ್ ಭಾರತದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿದರೆ ಅಥವಾ ದ್ವೇಷದ ಭಾಷಣ ಮತ್ತು ನಿಂದನೆಯನ್ನು ಅನುಮತಿಸುವ ಮೂಲಕ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂಬುದು ಕಂಡುಬಂದರೆ ಐಟಿ ಸಮಿತಿಯು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಯಾರು ಯಾವ ಸಾಮಾಜಿಕ ಮಾಧ್ಯಮ ಕಂಪನಿಯನ್ನು ಹೊಂದಿದ್ದಾರೆ ಎಂಬುದು ಮುಖ್ಯವಲ್ಲ. ಅವರು ಏನು ಮಾಡುತ್ತಾರೆ ಮತ್ತು ಹೇಗೆ ನಿರ್ವಹಿಸುತ್ತಾರೆ ಎಂಬುದು ಮುಖ್ಯ ಎಂದು ಟ್ವೀಟ್ ಮೂಲಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
ಟ್ಟಿಟ್ಟರ್ ಖರೀದಿಸಿದ ನಂತರ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಎಲಾನ್ ಮಸ್ಕ್ ಹೇಳಿಕೆ ನೀಡಿದ ನಂತರ ಶಶಿ ತರೂರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರವೆನ್ನುವುದು ಪ್ರಜಾಪ್ರಭುತ್ವದಲ್ಲಿ ಮಹತ್ವದ್ದು. ಟ್ವಿಟರ್, ಇಂದಿನ ಡಿಜಿಟಲ್ ಯುಗದಲ್ಲಿ ಅದಕ್ಕೆ ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮಸ್ಕ್ ಟ್ವೀಟ್ ಮಾಡಿದ್ದರು.
