ಕೈಕಂಬ: ಬಂಟ್ವಾಳ ಇಲ್ಲಿನ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರ ಒಡ್ಡೂರು ಫಾಮ್ಸ್ರ್ ನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷ ಸಂಘಟನೆಗಾಗಿ ವಿನೂತನ ರೀತಿಯ ‘ಕಮಲೋತ್ಸವ’ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದ್ದಾರೆ.
ಬಿ.ಸಿ.ರೋಡು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಿಗ್ಗೆ 9.30 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಸಹಿತ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಭಾಗವಹಿಸುವರು ಎಂದರು. ಅಂದು ದಿನವಿಡೀ ಪಕ್ಷದ ಕಾರ್ಯಕರ್ತರಿಗಾಗಿ ಊಟೋಪಚಾರ ಸಹಿತ ವಿವಿಧ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ. ಬಂಟ್ವಾಳ ಕ್ಷೇತ್ರದ ಒಟ್ಟು 59 ಗ್ರಾಮದ ಪ್ರತೀ ಬೂತ್ ನಿಂದ ತಲಾ 15ರಿಂದ 50 ಮಂದಿ ಕಾರ್ಯಕರ್ತರು ಮತ್ತು ಅವರ ಕುಟುಂಬಿಕರು ಭಾಗವಹಿಸಿ ಸುಮಾರು 15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ಬಂಟ್ವಾಳ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರೊನಾಲ್ಡ್ ಡಿ’ಸೋಜ, ಪುರುಷೋತ್ತಮ ಶೆಟ್ಟಿ ವಾಮದಪದವು, ರಂಜಿತ್ ಮೈರ, ಯಶೋಧರ ಕಬರ್ೆಟ್ಟು, ಜನಾರ್ದನ ಬೊಂಡಾಲ ಮತ್ತಿತರರು ಇದ್ದರು.
