ಬಂಟ್ವಾಳ: ಕೇಂದ್ರ ಸರ್ಕಾರದ ಕೆಲವೊಂದು ತಪ್ಪು ನಿರ್ಧಾರದಿಂದ ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ತಾಂಡವವಾಡುತ್ತಿದ್ದು, ಇದು ಜನತೆಗೆ ಅತೀ ದೊಡ್ಡ ಶತ್ರುವಾಗಿ ಜನರ ಜೀವ ಹಿಂಡುತ್ತಿದೆ. ನ.06ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬಂಟ್ವಾಳ ಸಮಾಜ ಸೇವಾ ಬ್ಯಾಂಕಿನ ಸಭಾಂಗಣದಲ್ಲಿ ಎ.ಐ.ಟಿ.ಯು.ಸಿ ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ ಆಯೋಜಿಸಲಾಗಿದೆ ಎಂದು ಎ.ಐ.ಟಿ.ಯು.ಸಿ.ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ಆರೋಪಿಸಿದ್ದಾರೆ.
ಇಲ್ಲಿನ ಬಿ.ಸಿ.ರೋಡಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರ ಕೂಡಾ ವಿವಿಧ ಇಲಾಖೆಗಳಲ್ಲಿ ಖಾಲಿಯಾಗಿರುವ ಯಾವುದೇ ಹುದ್ದೆಗಳನ್ನು ಭರ್ತಿ ಮಾಡುವ ಗೋಜಿಗೆ ಹೋಗುತ್ತಿಲ್ಲ. ಕೋವಿಡ್ ಹೆಸರಿನಲ್ಲಿ ಜನರನ್ನು ವಂಚಿಸಿದ ಸರ್ಕಾರ ಶೇ.೪೦ ಕಮಿಷನ್ ಧಂಧೆಯಲ್ಲಿ ಮುಳುಗಿದೆ ಎಂದರು.
ನೈಜ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ಬದಲಾಗಿ ರಾಜಕೀಯ ಹಿಂಬಾಲಕರು ಮತ್ತಿತರ ನಕಲಿ ಕಾರ್ಮಿಕರು ಕಲ್ಯಾಣ ಮಂಡಳಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ರಿಕ್ಷಾ ಚಾಲಕರು ಮತ್ತಿತರ ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ಕೇವಲ ರೂ ೨೫ ಕೋಟಿ ಮೀಸಲಿಟ್ಟು ಅನ್ಯಾಯ ಮಾಡಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ರೈತರಂತೆ ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಬೀಡಿ ಕಾರ್ಮಿಕರು ಮತ್ತಿತರರಿಗೆ ಕನಿಷ್ಟ ಕೂಲಿ ಮತ್ತಿತರ ಸೌಲಭ್ಯ ನೀಡುತ್ತಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ವಿ.ಎಸ್.ಬೇರಿಂಜ, ವಿ.ಕುಕ್ಯಾನ್, ಜಿಲ್ಲಾ ಘಟಕ ಅಧ್ಯಕ್ಷ ಎಚ್.ವಿ.ರಾವ್, ಬಿ.ಶೇಖರ್, ಸುರೇಶ್ ಕುಮಾರ್ ಬಂಟ್ವಾಳ್ ಇದ್ದರು.
