ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ
ಬಂಟ್ವಾಳ: ತಾಲೂಕಿನ ಅಮ್ಮುಂಜೆಯಲ್ಲಿ ಇತ್ತೀಚಿಗೆ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ಶನಿವಾರ ಸಂಜೆ ನಡೆಯಿತು.

ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲೆಯಲ್ಲಿರುವ ಹಿರಿಯ ಸಾಹಿತಿಗಳಾದ ವಾಮನನಂದಾವರ,ಕೆ.ಟಿ.ಗಟ್ಟಿ ಸೇರಿದಂತೆ ಹಲವಾರು ಹಿರಿಯ ಸಾಹಿತಿಗಳ ಮನೆಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳುವುದರ ಜತೆಗೆ ನಿರಂತರ ಕಾರ್ಯಕ್ರಮದ ಮೂಲಕ ಸಾಹಿತ್ಯವನ್ನು ಮನೆ,ಮನೆಗೆ ಪರಿಚಯಿಸುವ ಕಾರ್ಯದಲ್ಲಿ ನಿರತವಾಗಿದೆ.ಬಂಟ್ವಾಳ ತಾಲೂಕು ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದರು.
ಸಮೇಳನದ ದಾಖಲೀಕರಣ ಮತ್ತು ಇದನ್ನು ಶಾಶ್ವತ ನೆನಪಿನಲ್ಲಿಡುವ ನಿಟ್ಟಿನಲ್ಲಿ ಸ್ಮರಣ ಸಂಚಿಕೆಯ ಅಗತ್ಯವಿದೆ ಎಂದ ಅವರು ಬಹುತೇಕ ತಾಲೂಕಿನ ಸಾಹಿತ್ಯ ಸಮ್ಮೇಳನಗಳ ಸ್ಮರಣ ಸಂಚಿಕೆ ಬಿಡುಗಡೆಯಾಗಿದ್ದು,ಶೀಘ್ರದಲ್ಲಿಯೇ ಜಿಲ್ಲಾ ಸಮ್ಮೇಳನದ ಸ್ಮರಣಸಂಚಿಕೆಯು ಬಿಡುಗಡೆಯಾಗಲಿದೆ ಎಂದರು.
ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಎ.ಮಂಜಯ್ಯ ಶೆಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೋ. ಬಾಲಕೃಷ್ಣ ಗಟ್ಟಿ ಅಧ್ಯಕ್ಷತೆ ವಹಿಸಿದ್ಧರು.
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ,ವಿಶ್ರಾಂತ ಮುಖ್ಯೋಪಾಧ್ಯಾಯಿನಿ ಲುವಿಝ ಕುಟಿನ್ಹೊ,ಉಪನ್ಯಾಸಕರಾದ ಅಬ್ದುಲ್ ರಝಾಕ್ ಅನಂತಾಡಿ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಮೇಶ್ ಸಾಲಿಯಾನ್ ಬೆಂಜನಪದವು, ಪ್ರ.ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ,ಗೌರವ ಕೋಶಾಧ್ಯಕ್ಷ ಅಬ್ದುಲ್ ರಹಿಮಾನ್ ಡಿ.ಬಿ. ವೇದಿಕೆಯಲ್ಲಿದ್ದರು.
22 ನೇ ಬಂಟ್ವಾಳ ತಾ.ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ಸಂಚಾಲಕ ಅಬುಬಕ್ಕರ್ ಅಮ್ಮುಂಜೆ ಪ್ರಸ್ತಾವನೆಗೈದರು.
ಬಂಟ್ವಾಳ ತಾ.ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪಾಡಿ ಸ್ವಾಗತಿಸಿದರು. ತಾಲೂಕು ಕಸಾಪ ಗೌರವ ಸಲಹೆಗಾರ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ವಿ.ಸುಬ್ರಹ್ಮಣ್ಯ ಭಟ್ ವಂದಿಸಿದರು.
ಇದಕ್ಕು ಮೊದಲು ಜಿಲ್ಲೆಯ ಪ್ರಸಿದ್ಧ ಅರ್ಥಧಾರಿಗಳಿಂದ ‘ಶರಸೇತು ಬಂಧನ’ ಯಕ್ಷಗಾನ ತಾಳಮದ್ದಳೆ ನಡೆಯಿತು.