ಸಂಘದ ವಿರುದ್ಧ ಅವಹೇಳನ ಮಾಡುತ್ತಿರುವ 5 ಮಂದಿ ನೌಕರರ ವಿರುದ್ಧ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಲ್ಲದೆ, ಸಾಮಾಜಿಕ ಜಾಲಾತಾಣಗಳಲ್ಲಿ ಸಂಘದ ಬಗ್ಗೆ ಅವಹೇಳನ ಮಾಡುತ್ತಿದ್ದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಬಂಟ್ವಾಳ ಶಾಖೆಯ ಅಧ್ಯಕ್ಷ ಉಮನಾಥ ರೈ ಮೇರಾವು ಮಾತನಾಡಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ಸರಕಾರಿ ನೌಕರರ ಎಲ್ಲಾ ಬೇಡಿಕೆಗಗಳನ್ನು ಈಡೇರಿಸಿಕೊಂಡು, ನೌಕರರಿಗೆ ಸಿಗಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಿ, ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಸಂಘ ಕಾರ್ಯನಿರ್ವಹಿಸಿಕೊಂಡು ಬಂದಿದೆ.
ಅನೇಕ ಮಂದಿ ರಾಜ್ಯಧ್ಯಕ್ಷರು ಸಂಘದ ಅಭಿವೃದ್ದಿಗಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಪ್ರಸ್ತುತ ಷಡಕ್ಷರಿ ಅವರ ನೇತೃತ್ವದಲ್ಲಿ ಬಲಿಷ್ಠ ಸಂಘಟನೆಯಾಗಿ, ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಕೆಲವು ಬೆರಳೆಣಿಕೆಯ ಮಂದಿ ತಮ್ಮ ಸ್ವಾರ್ಥ ಸಾಧನೆಗಾಗಿ ಸಂಘದ ಮೇಲೆ ಕ್ಷುಲಕ ಆರೋಪಗಳನ್ನು ಮಾಡುತ್ತಾ, ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನ ಮಾಡುತ್ತಿದ್ದಾರೆ, ಸಂಘವನ್ನು ಬರ್ಕಾಸ್ತು ಮಾಡಿ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುತ್ತಾರೆ ಇದನ್ನು ವಿರೋಧಿಸಿ, ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದರು.
ಉಪತಹಶೀಲ್ದಾರ್ ನರೇಂದ್ರನಾಥ್ ಅವರು ಮನವಿ ಸ್ವೀಕರಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್., ಸಂಘದ ಆಂತರಿಕ ಲೆಕ್ಕಪರಿಶೋಧಕ ಅಂಬಾಪ್ರಸಾದ್, ಕ್ರೀಡಾಕಾರ್ಯದರ್ಶಿ ಫ್ರಾನ್ಸಿಸ್ ಡೇಸಾ, ಉಪಹಶೀಲ್ದಾರ್ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ಪ್ರಮುಖರಾದ ಯತೀಶ್, ಅನಿಲ್ ಕೆ. ಪೂಜಾರಿ, ಸೀತಾರಾಮ ಪೂಜಾರಿ, ಪುಟ್ಟರಂಗನಾಥ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂತೋಷ್ ಕುಮಾರ್ ತುಂಬೆ ಸ್ವಾಗತಿಸಿ, ವಂದಿಸಿದರು.