ಮಹಿಳಾ ದಿನದಂದು ರಾಜ್ಯಸಭೆಗೆ ಸುಧಾಮೂರ್ತಿಯವರ ನಾಮನಿರ್ದೇಶನ : ಸಂತೋಷ ವ್ಯಕ್ತಪಡಿಸಿದ ಇನ್ಫೊಸಿಸ್ ಪ್ರತಿಷ್ಠಾಪನದ ಅಧ್ಯಕ್ಷೆ
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅಚ್ಚರಿ ಮೂಡಿಸಿದೆ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹೇಳಿದ್ದಾರೆ.
ʼನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ, ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ, ಮಹಿಳಾ ದಿನದಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ ಇದರಿಂದ ನನಗೆ ತುಂಬಾ ಸಂತೋಷವಾಗಿದೆ, ನಾನು ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ದೂರವಾಣಿ ಮೂಲಕ ʼಪಿಟಿಐʼಗೆ ತಿಳಿಸಿದ್ದಾರೆ.
ʼರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜ ಸೇವೆ, ಲೋಕೋಪಚಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.
ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ʼನಾರಿ ಶಕ್ತಿʼಗೆ ಬಲ ಬಂದಂತಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ ಎಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಸುಧಾಮೂರ್ತಿಯವರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಸಾಮಾಜಿಕ ಮಾಧ್ಯಮ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿದ್ದಾರೆ.