ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ,ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು
ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರಿನಲ್ಲಿ ಐವರು ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಪರಿಸರದಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿದ್ದ ಘಟನೆ ಭಾನುವಾರ ಸಂಜೆ ನಡೆದಿದ್ದು,ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ.
ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಆರೋಪಿಗಳನ್ನು ಭೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಎಂದು ಹೆಸರಿಸಲಾಗಿದೆ. ಬಡಗಬೆಳ್ಳೂರು ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾರಕಾಸ್ತ್ರ ಪ್ರದರ್ಶಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೆ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ತೆರಳಿದಾಗ, ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು ಮಾಡುತ್ತಿರುವುದು ಕಂಡುಬಂದಿದೆ.
ಪೊಲೀಸರು ಸ್ಥಳಕ್ಕಾಗಮಿಸಿದನ್ನು ಕಂಡ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಲಾಗಿದೆ.ತಕ್ಷಣ ಸ್ಥಳದಲ್ಲಿದ್ದ ಅಟೋ ರಿಕ್ಷಾವೊಂದನ್ನು ಪರಿಶೀಲಿಸಿದಾಗ ತಲವಾರು ಪತ್ತೆಯಾಗಿರುತ್ತದೆ.
ಆಟೋರಿಕ್ಷಾ ಹಾಗೂ ತಲವಾರನ್ನು ವಶಪಡಿಸಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.