ಬಂಟ್ವಾಳ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ”ಘೋಷಣೆ ಕೂಗಿದ ಕಾರ್ಯಕರ್ತರನ್ನು ದುಷ್ಕರ್ಮಿಗಳುಸಾರ್ವಜನಿಕವಾಗಿ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆಗೈದು ಕೊಲೆಗೆ ಯತ್ನಿಸಿರುವ ಘಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಖಂಡಿಸಿದ್ದಾರೆ.

ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು ಈ ಘಟನೆ ಪೂರ್ವಯೋಜಿತ ಕೃತ್ಯವಾಗಿದ್ದು, ಆರೋಪಿಗಳ ಸಹಿತ ಸಹಕಾರ ನೀಡಿದ ಮತ್ತು ಯೋಜನೆ ರೂಪಿಸಿದ ಪ್ರತಿಯೊಬ್ಬರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಿಬೇಕೆಂದು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅದೇರೀತಿ”ಭಾರತ್ ಮಾತ ಕೀ ಜೈ” ಹಾಕಿದವರ ಮೇಲೆ ಹಾಕಿರುವ ಪ್ರಕರಣವನ್ನು ಹಿಂಪಡೆಯುವಂತೆ ಯು ಒತ್ತಾಯಿಸಿರುವ ಶಾಸಕರು ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಸಂತಸ ಕ್ಷಣದಂದು ಇಡೀ ದೇಶದಲ್ಲಿ ಕೋಟ್ಯಾಂತರ ಜನತೆ ಜೈಕಾರ ಹಾಕಿದ್ದಾರೆ. ಹಾಗಾದರೆ ಎಲ್ಲರ ಮೇಲೂ ಕೇಸು ದಾಖಲಿಸಲಾಗುತ್ತಾ? ಜೈಕಾರ ಹಾಕಿರುವಲ್ಲೆಡೆ ಇಂತಹ ಕೃತ್ಯ ನಡೆದಿದಾ? ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಇದು ಒಂದು ಸಾಕ್ಷಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಪಾಕಿಸ್ತಾನಕ್ಕೆ ಜಿಂದಾಬಾದ್” ಘೋಷಣೆ ಕೂಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳು ಭಾರತ್ ಮಾತಕೀ ಜೈ ಹಾಕಿದವರ ಮೇಲೆ ಪ್ರಕರಣ ದಾಖಲಿಸುತ್ತಾರೆಂದಾದರೆ ಪೊಲೀಸರ ಕಾರ್ಯವೈಖರಿ ಬಗ್ಗೆಯು ಸಂಶಯಗಳು ವ್ಯಕ್ತವಾಗುತ್ತದೆ.ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದ.ಕ.ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ನ್ಯಾಯಯುತವಾಗಿ ಕೆಲಸ ಮಾಡುವುದನ್ನು ಬಿಟ್ಟು ರಾಜಕೀಯ ಪಕ್ಷಗಳ ಕೈ ಗೊಂಬೆಯಂತೆ ಕಾರ್ಯನಿರ್ವಹಿಸಿದರೆ ಅಶಾಂತಿ ಉಂಟಾದರೆ ಇದಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಸರಕಾರವೇ ಹೊಣೆ ಎಂದು ಶಾಸಕ ರಾಜೇಶ್ ನಾಯ್ಕ್ ಎಚ್ಚರಿಸಿದ್ದಾರೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸಹಿತ ಸ್ಥಳೀಯ ಬಿಜೆಪಿ ಪ್ರಮುಖರು ಹಾಜರಿದ್ದರು.
