ಜಾರಿ ಬಿದ್ದು ಕಾಲಿಗೆ ಹಾಗೂ ಸೊಂಟಕ್ಕೆ ಪೆಟ್ಟು ಮಾಡಿಕೊಂಡ ಶಾಸಕ ರಾಜೇಶ್ ನಾಯ್ಕ್, 4 ವಾರ ವಿಶ್ರಾಂತಿಗೆ ವೈದ್ಯರ ಸೂಚನೆ

ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಅವರು ಜಾರಿ ಬಿದ್ದು ಕಾಲು ಹಾಗು ಸೊಂಟಕ್ಕೆ ಗಾಯ ಮಾಡಿಕೊಂಡಿದ್ದಾರೆ. ಯಾವುದೇ ದೊಡ್ಡ ಮಟ್ಟದ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ನಾಲ್ಕು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರದ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಶಾಸಕರ ಕಚೇರಿ ಮೂಲಗಳು ಅಧಿಕೃತವಾಗಿ ತಿಳಿಸಿದೆ.
ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಯಾದ ಪ್ರದೇಶಗಳಿಗೆ ಬಿಜೆಪಿ ವಿಪಕ್ಷ ನಾಯಕ ಆರ್.ಆಶೋಕ್ ಅವರು ಬಂಟ್ವಾಳಕ್ಕೆ ಆಗಮಿಸಿದ ದಿನದಂದು ಬೆಳಿಗ್ಗೆ ಶಾಸಕ ರಾಜೇಶ್ ನಾಯ್ಕ್ ಅವರು ಬಿದ್ದು ಕಾಲಿಗೆ ಹಾಗೂ ಸೊಂಟಕ್ಕೆ ಗಾಯ ಮಾಡಿಕೊಂಡಿದ್ದಾರೆ. ಅದೇ ದಿನ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ಕಾಲಿನ ಬೆರಳಿಗೆ ಹೊಲಿಗೆ ಹಾಕಿಸಿಕೊಂಡಿದ್ದಾರೆ.
ಬಿಜೆಪಿ ವತಿಯಿಂದ ನಡೆಯುವ ಪಾದಾಯಾತ್ರೆ ವಿಚಾರವಾಗಿ ( ಅಗಸ್ಟ್ 2 ರಂದು )ಈ ದಿನ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಶಾಸಕರಿಗೆ ಕಾಲಿನ ನೋವು ಉಲ್ಬಣಗೊಂಡಿದೆ. ಹಾಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಕಾಲಿನಲ್ಲಿ ಬಿರುಕು ಇರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದ್ದರು.
ವೈದ್ಯರ ಸಲಹೆಯ ಮೇರೆಗೆ ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ಎಕ್ಸರೇ ನಡೆಸಿದ ಮೂಲೆ ತಜ್ಞ ಡಾ| ಅಜಿತ್ ಕುಮಾರ್ ರೈ ಅವರು ಕಾಲಿಗೆ ಗಾಯ ಆಗಿರುವ ಬಗ್ಗೆ ತಿಳಿಸಿದ್ದಾರೆ. ಮುಂದಿನ ನಾಲ್ಕು ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಅನಾರೋಗ್ಯದ ಕಾರಣದಿಂದ ಮುಂದಿನ ನಾಲ್ಕು ವಾರಗಳ ಕಾಲ ಶಾಸಕರು ಸಾರ್ವಜನಿಕರ ಸಂಪರ್ಕಕ್ಕೆ ಸಿಗಲು ಕಷ್ಟಸಾಧ್ಯ ಎಂದು ಕಚೇರಿ ಮೂಲಗಳು ತಿಳಿಸಿವೆ. ಅಗತ್ಯವಿರುವ ಕೆಲಸಗಳಿಗೆ ಪೋನ್ ಮೂಲಕ ಸಂಪರ್ಕ ಮಾಡುವಂತೆ ಅಥವಾ ಶಾಸಕರ ಕಚೇರಿಯನ್ನು ಸಂಪರ್ಕ ಮಾಡಲು ಕೋರಿದ್ದಾರೆ.