ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ :ಸಂಸದ ಕ್ಯಾ.ಬ್ರೆಜೇಶ್ ಚೌಟ
ಬಂಟ್ವಾಳ: ದಿವಂಗತ ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರಂತೆ ಮಕ್ಕಳು ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ಪ್ರತಿಯೊಂದು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಮತ್ತು ಅವರಂತೆ ಸಾಧನೆ ಮಾಡಲು ಮನಸ್ಸನ್ನು ಹೊಂದಬೇಕು ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಾರ್ಷಿಕ ಸಂಚಿಕೆ “ರಾಮಧ್ವನಿ” ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ನೆರವೇರಿಸಿದರು.

ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ವಿದ್ಯಾರ್ಥಿ ಸಂಘದ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನಗೈದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಸಂಸ್ಥೆಯ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ವಿದ್ಯಾರ್ಥಿಗಳು ತಮಗೆ ಸಿಗುವಂತ ಅವಕಾಶಗಳನ್ನು ವ್ಯರ್ಥಗೊಳಿಸದೆ ಸದುಪಯೋಗಪಡಿಸಿಕೊಳ್ಳಲು ಕಲಿಯಬೇಕು, ಸದ್ಗುರುವಿನ ಮಾರ್ಗದರ್ಶನದಲ್ಲಿ ಗುರಿ ಸಾಧನೆಗೆ ಶ್ರಮಿಸಬೇಕು.ವಿದ್ಯಾರ್ಥಿ ಶಕ್ತಿಯೇ ರಾಷ್ಟ್ರ ಶಕ್ತಿ ಎಂದು ಹೇಳಿದರು.
ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿಯವರು ಪದವಿ ಕಾಲೇಜಿನ ವಾರ್ಷಿಕ ಸಂಚಿಕೆಯಾದ “ರಾಮಧ್ವನಿ”ಯನ್ನು ಬಿಡುಗಡೆಗೊಳಿಸಿದರು.
ಸಂಸ್ಥೆಯ ಸಂಚಾಲಕ ವಸಂತ ಮಾಧವ, ಕಾಲೇಜಿನ ಉಪಪ್ರಾಂಶುಪಾಲರಾದ ಸುಕನ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಸಂಧ್ಯಾಕುಮಾರಿ ಸ್ವಾಗತಿಸಿದರು, ವಿದ್ಯಾರ್ಥಿನಿ ಕು. ವಿಜೇತಾ ವಂದಿಸಿದರು, ಉಪನ್ಯಾಸಕಿ ಶ್ರೀಮತಿ ರಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಪದ್ಮಶ್ರೀ ಪ್ರಾರ್ಥಿಸಿದರು.