ಬಂಟ್ವಾಳ:ಅವಿಭಜಿತ ಜಿಲ್ಲೆಯಲ್ಲಿ ಯಾವುದೇ ಜಾತಿ-ಮತ-ಧರ್ಮಗಳ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ಕೇವಲ ದ್ವೇಷ ಭಾಷಣದಿಂದ ದೇಶಭಕ್ತಿ ಮೂಡಿಸುವ ಬದಲಾಗಿ ಸ್ವತಃ ಆಚರಣೆಯಿಂದ ದೇಶಭಕ್ತರಾಗಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ಇಲ್ಲಿನ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ‘ತುಳು ಭಾಷೆ 8ನೇ ಪರಿಚೇದಕ್ಕೆ ಸೇರ್ಪಡೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಕಾಳಜಿ ವಹಿಸುತ್ತಿದ್ದು, ಮತ್ತಷ್ಟು ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ’ ಎಂದರು.
ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಮತ್ತಿತರರು ಇದ್ದರು.
ಸಮಿತಿ ಪ್ರಧಾನ ಕಾರ್ಯದಶರ್ಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿ, ರಾಜೀವ ಕಕ್ಯಪದವು ವಂದಿಸಿದರು. ರಂಗ ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.
