ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ೧.೬೮ಕೋ. ರೂ. ಲಾಭ : ಪ್ರಭಾಕರ ಪ್ರಭು
ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘವು ೨೦೨೩-೨೪ ನೇ ಸಾಲಿನಲ್ಲಿ ೪೪೫.೪೫ ಕೋ.ರೂ.ವ್ಯವಹಾರ ನಡೆಸಿ ೧.೬೮ ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಹೇಳಿದ್ದಾರೆ.

ಬುಧವಾರ ಸಿದ್ದಕಟ್ಟೆಯಲ್ಲಿರುವ ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ ಅವರು .ಸಂಘವು ೧೯೪೭ ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಬಿ. ಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು , ಕಳೆದ ೭೭ ವರ್ಷಗಳಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ ಎಂದರು.
೨೦೨೩-೨೪ ನೇ ಸಾಲಿನ ವರ್ಷಾಂತ್ಯಕ್ಕೆ ೫೪.೩೯ ಕೋಟಿ ರೂ.ಠೇವಣಿ ಹೊಂದಿದ್ದು , ವರದಿ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು ೫೫ ಕೋಟಿ ರೂ.ಸಾಲ ವಿತರಿಸಲಾಗಿದೆ. ಶೇ. ೯೮ರಷ್ಟು ಸಾಲ ವಸೂಲಾತಿಯಾಗಿರುತ್ತದೆ. ಸಂಘವು ಅಡಿಟ್ ವರದಿಯಲ್ಲಿಯು ‘ಎ’ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬಂದಿದೆ ಎಂದರು.
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಸಂಘವು ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ ಮಾಡಿದೆ. ೨೦೨೩-೨೪ ನೇ ಸಾಲಿನಲ್ಲಿ ೧,೭೭೧ ರೈತರು ೨,೦೩೭ ಎಕ್ರೆ ಜಮೀನಿಗೆ ಸಂಬಂಧಿಸಿದಂತೆ ೫೨.೭೪ ಲಕ್ಷ ರೂ.ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ ಎಂದರು.
ಸಂಘದ ಸದಸ್ಯರ ಪ್ರತಿಭಾನ್ವಿತ ಎಸೆಸ್ಸೆಲ್ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ ರೈತನಿಧಿ ಯೋಜನೆಯ ಮೂಲಕ ಆರ್ಥಿಕವಾಗಿ ಸಹಕಾರ ನೀಡಲಾಗುತ್ತಿದೆ ಎಂದರು.
ಸಿದ್ದಕಟ್ಟೆ ಪೇಟೆಯ ಶ್ರೀ ರಾಮನಗರದಲ್ಲಿ ಸುಸಜ್ಜಿತವಾದ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಆಟೋ ರಿಕ್ಷಾ ನಿಲ್ದಾಣವನ್ನು ಸಂಘದ ವತಿಯಿಂದ ನಿರ್ಮಿಸಲಾಗಿದೆ ಎಂದರು.
ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದ್ದು, ಸಂಘದಲ್ಲಿ ನೇತಾಜಿ ಬಹುಪಯೋಗಿ ಸೇವಾಕೇಂದ್ರದ ಗೋದಾಮು, ರಾಸಾಯನಿಕ,ಸಾವಯವ ಗೊಬ್ಬರ, ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
ಸಿದ್ದಕಟ್ಟೆಯಲ್ಲಿ ಪ್ರಧಾನ ಕಛೇರಿ ಸೇರಿದಂತೆ ಆರಂಬೋಡಿ, ರಾಯಿ, ಮಾವಿನಕಟ್ಟೆಎಂಬಲ್ಲಿ ಮೂರು ಶಾಖೆಗಳನ್ನು ಹೊಂದಿದೆ, ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಗಣಕೀಕರಣ ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ. ಸಂಘದ ಸ್ಥಾಪಕಾಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸ್ಮರಣಾರ್ಥ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ನಿರ್ಮಿಸಲಾಗಿದ್ದು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಸಂಘದ ವಾರ್ಷಿಕ ಮಹಾಸಭೆಯು ಸೆ.೨೧ ರಂದು ಬೆಳಗ್ಗೆ ೧೦ ಗಂಟೆಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣದಲ್ಲಿ ಜರಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ , ನಿರ್ದೇಶಕರಾದ ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು , ಉಮೇಶ್ ಗೌಡ , ದೇವರಾಜ್ ಸಾಲ್ಯಾನ್ , ಹರೀಶ್ ಆಚಾರ್ಯ, ಮಂದಾರತಿ ಎಸ್. ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್ ಉಪಸ್ಥಿತರಿದ್ದರು.