ಮಂಗಳೂರು: ಫೆಂಗಲ್ ಚಂಡಮಾರುತ: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ಕೆರೆ, ನದಿ, ಸಮುದ್ರಕ್ಕೆ ಇಳಿಯದಂತೆ ಡಿಸಿ ಸೂಚನೆ

ಮಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಕರಾವಾಳಿ ಭಾಗಕ್ಕೂ ಈ ಪರಿಣಾಮ ಉಂಟಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್ ಉಂಟಾಗಿದ್ದು, ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ನೀಡಿದ್ದಾರೆ. ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಇಳಿಯದಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗೃತಿ ವಹಿಸುವಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗೂ ಪ್ರಕೃತಿ ವಿಕೋಪ ಉಂಟಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ.
ಇದರ ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿಲಾಗಿದೆ. ಜಿಲ್ಲಾ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರಿಂದ ಈ ಸೂಚನೆ ನೀಡಲಾಗಿದೆ. ಡಿ.6ರವರೆಗೆ ಯಾವುದೇ ರೀತಿಯ ಮೀನುಗಾರಿಕೆ ನಡೆಸದಂತೆ ಆದೇಶವನ್ನು ನೀಡಲಾಗಿದೆ. ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಹಾಗೂ ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು ಕೂಡಲೇ ದಡ ಸೇರುವಂತೆ ಸೂಚನೆ ನೀಡಲಾಗಿದೆ.