ಬಂಟ್ವಾಳ:ಈ ಬಾರಿಯ ಮಳೆಯಿಂದಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳು ಹಾನಿಯಾಗಿ ವಾಹನ ಸಂಚಾರ ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಾಕೃತಿಕ ವಿಕೋಪದಡಿ ಈ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಲು ಕ್ರಮಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಬುಧವಾರ ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತ ಸಭೆಯಲ್ಲಿ ಭಾಗವಹಿಸಿ ಆಗ್ರಹಿಸಿದರು.

ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಕುರಿತು ಚರ್ಚ ನಡೆದಿದ್ದು, ಈ ಬಾರಿಯ ಅತಿಯಾದ ಮಳೆಯಿಂದಾಗಿ ಕ್ಷೇತ್ರದ ಪ್ರಮುಖ ರಸ್ತೆಗಳು ಹಾನಿಯಾದ ಪರಿಣಾಮ ವಾಹನ ಸಂಚಾರ ಕಷ್ಟ ಸಾಧ್ಯವಾಗಿದೆ. ಪ್ರಾಕೃತಿಕ ವಿಕೋಪದಡಿಯಲ್ಲಿ ಈ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಗೊಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದರಲ್ಲಿಯು ಪ್ರಮುಖವಾಗಿ 2017-18ನೇ ಸಾಲಿನಲ್ಲಿ ಬಂಟ್ವಾಳದ ಕಡೇಶಿವಾಲಯ – ಮಣಿನಾಲ್ಕೂರು ಗ್ರಾಮದಲ್ಲಿ 18.00 ಕೋಟಿ ರೂ. ವೆಚ್ಚದಲ್ಲಿ ಕೆ.ಆರ್.ಡಿ.ಸಿ.ಎಲ್. ಮೂಲಕ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಇನ್ನೂ ಅಪೂರ್ಣವಾಗಿದ್ದು,ಇದರ ಕಾಮಗಾರಿಯು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ. ತಕ್ಷಣವೇ ಸೇತುವೆಯ ಕಾಮಗಾರಿಯನ್ನು ಪುರ್ಣಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ ವಿಜಯ ಕುಮಾರಿ, ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಶಾಂತಕುಮಾರ, ಕೆ.ಆರ್.ಡಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಎನ್. ಸುಶೀಲಮ್ಮ, ವಿಧಾನ ಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಎನ್. ರಾಜಣ್ಣ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
