ಮಾನವೀಯತೆಯಿಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯದು: ಶ್ರದ್ದಾ ಅಮಿತ್
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರ ಪುತ್ರಿ ಶ್ರದ್ದಾ ಅಮಿತ್ ಹೇಳಿದರು.

ಶನಿವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆಯ ಪ್ರಯೋಜನ ಸದಸ್ಯರಿಗೆ ಸಿಗಬೇಕಾದರೆ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ಯೋಜನೆ ಮತ್ತು ಸದಸ್ಯರ ಮಧ್ಯೆ ಕೊಂಡಿಗಳಾಗಿ ಕಾರ್ಯನಿರ್ವಹಿಸಬೇಕು ಎಂದ ಅವರು ಡಾ. ವೀರೇಂದ್ರ ಹೆಗ್ಡೆಯವರು ವ್ಯಕ್ತಿ ಗೌರವಕ್ಕೆ ಪ್ರಾಮುಖ್ಯತೆ ಕೊಡುತ್ತಿದ್ದು, ಯೋಜನೆಯ ಸದಸ್ಯರ ಗೌರವಕ್ಕೆ ಧಕ್ಕೆಯಾಗದಂತೆ ಮಾನವೀಯತೆಯಿಂದ ವ್ಯವಹರಿಸಿಕೊಂಡು ಮೇಲ್ವಿಚಾರಕರು ಯೋಜನೆಯ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಕಚೇರಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಜಿಲ್ಲಾ ನಿರ್ದೇಶಕ ದಿನೇಶ್, ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಅಧಿಕಾರಿ ಮಹಾವೀರ ಅರ್ಜಿ,ಬಂಟ್ವಾಳ ಘಟಕದ ಯೋಜನಾಧಿಕಾರಿ ಜಯಾನಂದ ಪಿ.,ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ಯೋಜನಾ ಕಚೇರಿಯ ಯೋಜನಾಧಿಕಾರಿಗಳು, ಎಲ್ಲಾ ಮೇಲ್ವಿಚಾರಕರು, ಯೋಜನಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.



