ಬಂಟ್ವಾಳ:ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವನ್ನು ವಿದ್ಯಾ ಸಂಸ್ಥೆಯು ಮಾಡುತ್ತಿದೆ. ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕಲೆಯಲ್ಲಿ ಅಥವಾ ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಬೇಕು ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ಸಂಚಾಲಕರಾದ ಬಿ.ಸುರೇಶ್ ಬಾಳಿಗ ಹೇಳಿದರು.

ಗುರುವಾರ ಬಂಟ್ವಾಳಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎಮ್.ಡಿ. ಪ್ರೊ. ಸುಷ್ಮಾ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಯಾಶೀಲರಾಗಿದ್ದು ಕಲಿಕೆಯಲ್ಲಿ ಬುದ್ದಿವಂತಿಕೆಯಿಂದ ತೊಡಗಿಸಿಕೊಳ್ಳಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ. ಆನಂದ ಭಟ್ ವಿದ್ಯಾರ್ಥಿಗಳ ಸಾಧನೆಗೆ ಶುಭಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ವೆಂಕಟ್ರಮಣ ಶೆಣೈ , ಬಿ. ಶಿವಾನಂದ ಬಾಳಿಗ ,ಎಸ್ ಸುಬ್ರಾಯ ನಾಯಕ್ , ವಸಂತ ಮಲ್ಯ, ಶ್ರೀನಿವಾಸ ಪೈ, ಗಿರೀಶ್ ಪೈ, ಬಾಮಿ ಲಕ್ಷ್ಮಣ ಶೆಣೈ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮನೋಜ್ ಕುಮಾರ್ , ಉಪಾಧ್ಯಕ್ಷ ಜಗದೀಶ್ , ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ, ಮುಖ್ಯ ಶಿಕ್ಷಕಿ ರೋಶ್ನಿ ತಾರಾ ಡಿಸೋಜ, ಸಹ ಮುಖ್ಯ ಶಿಕ್ಷಕಿ ಜಾನಕಿ ರಾಜೇಶ್ ಉಪಸ್ಥಿತರಿದ್ದರು.
ಇದೇ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮತ್ತು ಕ್ರೀಡಾ ಮತ್ತು ಸಾಂಸ್ಕೃತಿಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬೆಂಕಿಯಿಲ್ಲದೆ ಅಡುಗೆ ಮಾಡುವ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ತಂಡಗಳಿಗೆ ಬಹುಮಾನ ನೀಡಲಾಯಿತು.
