ಬಂಟ್ವಾಳ: ದೀನ್ ದಯಾಳ್ ಅಂತ್ಯೋದಯ ಯೋಜನೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್ಆರ್ಎಲ್ಎಂ), ಸಂಜೀವಿನಿ–ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಬೆಳಕು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಪಿಲಾತಬೆಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಆಹಾರ ಪೌಷ್ಟಿಕತೆ, ಆರೋಗ್ಯ ಹಾಗೂ ನೀರು ಮತ್ತು ನೈರ್ಮಲ್ಯದ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರವು ಪಿಲಾತಬೆಟ್ಟು ಗ್ರಾಮ ಪಂಚಾಯತ್ನ ಸಂಜೀವಿನಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಕು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಪಿ. ರಾವ್ ವಹಿಸಿದ್ದರು.
ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಕ್ಕೂಟದ ಸದಸ್ಯರು ತರಬೇತಿಯಿಂದ ಪಡೆದ ಜ್ಞಾನವನ್ನು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ನಿರಂತರ ಜಾಗೃತಿ ಮೂಡಿಸಬೇಕೆಂದರು.
ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸುಧಾ ಮಾತನಾಡಿ, ಆಹಾರ, ಪೌಷ್ಟಿಕತೆ, ಆರೋಗ್ಯ ಹಾಗೂ ನೀರು-ನೈರ್ಮಲ್ಯದ ಕುರಿತು ಸಮುದಾಯದಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ತಿಳಿಸಿದರು.
ತಾಲೂಕು ಕೃಷಿಯೇತರ ವ್ಯವಸ್ಥಾಪಕ ಪ್ರದೀಪ್ ಕಾಮತ್, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಮೌನೇಶ್ ವಿಶ್ವಕರ್ಮ ಹಾಗೂ ಸುನೀತಾ ನಾಯ್ಕ್ ಉಪಸ್ಥಿತರಿದ್ದರು. ರಮ್ಯಾ ಸ್ವಾಗತಿಸಿದರು ಹಾಗೂ ಗೀತಾ ವಂದಿಸಿದರು.
ಸೀತಾ ಕಾರ್ಯಕ್ರಮ ನಿರೂಪಿಸಿದರು.
