ಉಡುಪಿ: ಬೈಂದೂರು ಸಮೀಪದ ಶಿರೂರು ಎಂಬಲ್ಲಿ ಸ್ಕೂಲ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ 9:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಕ್ಕಳೂ ಗಂಭೀರ ಗಾಯಗೊಂಡಿದ್ದರೆ 25 ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಂದೂರಿನ ಹೆಚ್ಎಂಎಂಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಮಿನಿ ಬಸ್ ಶಿರೂರು ಸಮೀಪದ ತಿರುವಿನಲ್ಲಿ ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಸ್ಸಿನ ಒಂದು ಬದಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಕೂಡಲೇ ಹೊರಕ್ಕೆಳೆದು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಸ್ಸಿನಲ್ಲಿದ್ದ 25 ಮಕ್ಕಳಿಗೆ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಸ್ಥಳೀಯರು ತಮ್ಮ ಸ್ವಂತ ವಾಹನಗಳಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಸ್ಥಳಕ್ಕೆ ಬೈಂದೂರು ಠಾಣಾ ಪೊಲೀಸರು ಭೇಟಿ ನೀಡಿದ್ದು ಬಸ್ಸನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಬೈಂದೂರು ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಕೂಲ್ ಬಸ್ ಚಾಲಕರಿಗೆ ನಿರ್ದಿಷ್ಟ ನಿಯಮಾವಳಿಗಳಿದ್ದರೂ ಅದನ್ನು ಪಾಲಿಸದ ಚಾಲಕರು ಆಗಾಗ ಅತೀವೇಗ ಮತ್ತು ನಿರ್ಲಕ್ಷ್ಯದಿಂದ ಸಂಚರಿಸಿ ಅಪಘಾತ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




