ಬಂಟ್ವಾಳ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಮಾಣ ಹಂತದಲ್ಲಿರುವ ನೂತನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕ್ಷೇತ್ರದಲ್ಲಿ ನಡೆಯಿತು.
ಅನ್ನಛತ್ರ ಮತ್ತು ಸಭಾಂಗಣ ನಿರ್ಮಾಣ ಕಾಮಗಾರಿಯ ಹಂತ, ತಾಂತ್ರಿಕ ಅಂಶಗಳು, ಅಗತ್ಯ ಮೂಲಸೌಕರ್ಯ, ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಅಧಿಕಾರಿಗಳು ಮತ್ತು ಇಂಜಿನಿಯರ್ಗಳೊಂದಿಗೆ ಈ ಸಂದರ್ಭ ಸಮಗ್ರ ಚರ್ಚೆ ನಡೆಸಲಾಯಿತು.

ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ರಾಜ್ಯದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ವರ್ಷಪೂರ್ತಿ ಸಾವಿರಾರು ಭಕ್ತರು ದೇವಸ್ಥಾನಕ್ಕಾಗಮಿಸುತ್ತಾರೆ. ಭಕ್ತಾದಿಗಳಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಅನ್ನಛತ್ರ ಹಾಗೂ ಸಭಾಂಗಣವು ಅತ್ಯಂತ ಉಪಯುಕ್ತ ಯೋಜನೆಯಾಗಿದ್ದು, ಕಾಮಗಾರಿಯಲ್ಲಿ ವಿಳಂಬಿಸದೆ ಹಾಗೂ ಗುಣಮಟ್ಟದಲ್ಲು ರಾಜಿ ಮಾಡಿಕೊಳ್ಳದೆ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅನ್ನದಾಸೋಹ , ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ದೆಸೆಯಲ್ಲಿ ನಿರ್ಮಿಸಲಾಗುತ್ತಿರುವ ಈ ಯೋಜನೆಯು ಭಕ್ತ ಸಮೂಹಕ್ಕು ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಕಾಮಗಾರಿಯ ಪ್ರತಿಯೊಂದು ಹಂತವನ್ನು ನಿಯಮಿತವಾಗಿ ಪರಿಶೀಲಿಸಿ, ಅಗತ್ಯವಿರುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳಿಗೆ ಅವರು ನಿರ್ದೇಶಿಸಿದರು.
ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ಮಾಧವ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರ ಮೋಹನ್, ಇಂಜಿನಿಯರ್ಗಳಾದ ಲಕ್ಷ್ಮಣ್ ಪೂಜಾರಿ, ಸುಪ್ರೀತ್ ಆಳ್ವ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು
