ಬಂಟ್ವಾಳ: ರಾ.ಹೆ.ಬಿ.ಸಿ.ರೋಡಿನ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ” ಬ್ರಹ್ಮಶ್ರೀ ನಾರಾಯಣಗುರು ವೃತ್ತ”ದ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣಗುರುಗಳ ೧೭೨ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ದವ ಹಾಗೂ ವಿದ್ಯಾರ್ಥಿವೇತನ ವಿತರಣೆ ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆಯಿತು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣಗುರು ವೃತ್ತ”ವನ್ನು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಗೌರವ ಉಪಸ್ಥಿತಿಯಲ್ಲಿ ದ.ಕ. ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸುವ ಮೂಲಕ ಲೋಕಾರ್ಪಣೆ ಗೊಳಿಸಿದರು.

ಈ ವೃತ್ತದ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವಹಿಸಲಿದೆ. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ,ಬೂಡಾ ಅಧ್ಯಕ್ಷ ಬೇಬಿಕುಂದರ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಲ್ಲವ ಸಂಘದ ಪದಾಧಿಕಾರಿಗಳು ಹಾಗೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ಗಾಣದಪಡ್ಪ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ಮೌನ ಕ್ರಾಂತಿಯ ಮೂಲಕ ಸಮಾಜಕ್ಕೆ ಬೆಳಕಾದ ಶ್ರೇಷ್ಠ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ, ತತ್ವ ಪಾಲನೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಮಾತನಾಡಿ, ಸುಂದರ ವೃತ್ತದ ಅದ್ದೂರಿಯಾದ ಉದ್ಘಾಟನಾ ಕಾರ್ಯ ಜನಸಾಗರದ ಮಧ್ಯೆ ಗಣ್ಯರಿಂದ ನಡೆದಿರುವುದು ಅತೀವ ಸಂತಸ ತಂದಿದೆ.ಸಂಘದಲ್ಲಿ ಹೆಚ್ಚು ಜನರು ತೊಡಗಿಸಿಕೊಳ್ಳುವ ಮೂಲಕ ಸಮುದಾಯ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಬ್ರಹ್ಮಶ್ರೀ ನಾರಾಯಣಗುರುಗಳು ಅಪ್ರತಿಮ ರಾಷ್ಟ್ರಭಕ್ತರು. ಅಂಧಕಾರದಿಂದ ಜ್ಞಾನದೆಡೆ ಸಾಗುವಂತೆ ಮಾಡಿದ ಶ್ರೇಷ್ಠ ಸಂತ. ಇಂದಿನ ಯುವಪೀಳಿಗೆ ಅವರ ತತ್ವಾದರ್ಶ ಕುರಿತು ಮಾಹಿತಿ ಇರಬೇಕು ಎಂದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ ,ಅತಿಥಿಯಾಗಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.ವೇದಿಕೆಯಲ್ಲಿ ಸಂಘದ ಜೊತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಸುನೀಲ್ ಎಸ್. ಕುಂದರ್ ಮೊಡಂಕಾಪು, ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ, ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಂಜರಕೋಡಿ ಉಪಸ್ಥಿತರಿದ್ದರು. ಪ್ರೇಮನಾಥ ಕರ್ಕೇರ ವಿದ್ಯಾರ್ಥಿವೇತನ ಪುರಸ್ಕೃತರ ಪಟ್ಟಿ ವಾಚಿಸಿದರು.
ಬಿಲ್ಲವ ಸಮಾಜ ಸೇವಾ ಸಂಘ ಉಪಾಧ್ಯಕ್ಷ ಜಯಪ್ತಕಾಶ್ ಜೆ.ಎಸ್. ಜಕ್ರಿಬೆಟ್ಟು ಸ್ವಾಗತಿಸಿದರು. ಇದೆರ ವೇಳೆ ಇಂಜಿನಿಯರ್ ಸುಜಯ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ವಂದಿಸಿದರು.
ಗುರುಮಂದಿರದಲ್ಲಿ ಬೆಳಿಗ್ಗೆ ಗಂಟೆ 7ರಿಂದ 8.30 ಭಜನಾ ಕಾರ್ಯಕ್ರಮ, ಗುರು ಪೂಜೆ, ಮಹಾಪೂಜೆ ನಡೆಯಿತು.ಮಧ್ಯಾಹ್ನ ಅನ್ನಸಂತರ್ಪಣೆ, ಬಳಿಕ “ದೇಯಿ ಬೈದೇತಿ”ಚಲನಚಿತ್ರ ಪ್ರದರ್ಶನ ನಡೆಯಿತು.
