ಮುಂಬಯಿ: ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾ ಗಿ ತುಳುನಾಡು ಸೂರ್ಯ ಸಂಪಾದಕ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆ (ಆಲ್ ಇಂಡಿಯಾ ಕನ್ಸೂಮೆರ್ ಪ್ರೊಟಕ್ಶನ್ ಆರ್ಗನೈಝೇಶನ್) ರಾಷ್ಟ್ರೀಯ ಉಪಾಧ್ಯಕ್ಷರ ಶಿಫಾರಸ್ಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಹರಿಶಂಕರ್ ಶುಕ್ಲಾ ಅವರು ಈ ಬಗ್ಗೆ ಸೆ.15ರಂದು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದು, ಈ ನೇಮಕಾತಿ ಅವಧಿಯು ಸೆ.15 ರಿಂದ 30,ಸೆ.2028 ವರೆಗೆ ಇರಲಿದೆ. ನೇಮಕಾತಿಯು ಸಂಘಟನೆಯ ಕೇಂದ್ರ ಕಾರ್ಯಕಾರಿ ಸಮಿತಿಯ ಅನುಮೋದನೆ ಹಾಗೂ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಯೋಗೀಶ್ ಶೆಟ್ಟಿ ಜಪ್ಪು ಅವರು ಮಂಗಳೂರು ನಗರ ಪಾಲಿಕೆ ಕಾರ್ಪೋರೇಟರ್ ಆಗಿ ಸೇವೆ ಸಲ್ಲಿಸಿದ್ದು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಯುವ ಸಾಧಕ ಪ್ರಶಸ್ತಿ, ಜ್ಞಾನ ಸರಸ್ವತಿ ರಾಜ್ಯ ಪ್ರಶಸ್ತಿ, ಸಂಘ ರತ್ನ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗೆ ಪಡೆದಿರುವವರಾಗಿರುತ್ತಾರೆ.
ಕರ್ನಾಟಕದಲ್ಲಿ ಗ್ರಾಹಕರ ಹಕ್ಕುಗಳು, ಗ್ರಾಹಕರ ಜಾಗೃತಿ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ಯೋಗಿಶ್ ಅವರ ಮೇಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಘಟನೆಯ ಘಟಕಗಳನ್ನು ಸಕ್ರಿಯಗೊಳಿಸುವುದು, ಗ್ರಾಹಕರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಗ್ರಾಹಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಉತ್ಪನ್ನಗಳು ಮತ್ತು ಸೇವೆಗಳು ದೊರೆಯುವಂತೆ ಜಾಗೃತಿ ಮೂಡಿಸುವುದು, ಗ್ರಾಹಕರ ಹಕ್ಕುಗಳ ಕುರಿತು ಅರಿವು ಹೆಚ್ಚಿಸುವುದು ಹಾಗೂ ಗ್ರಾಹಕರ ಸಮಸ್ಯೆಗಳಿಗೆ ಕಾನೂನುಬದ್ಧ ಮತ್ತು ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ಸ್ಪಂದಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಯೋಗಿಶ್ ಶೆಟ್ಟಿ ಜಪ್ಪು ಅವರ ನೇಮಕಾತಿಗೆ ಕರ್ನಾಟಕದ ವಿವಿಧ ಸಾಮಾಜಿಕ, ಸಂಘಟನಾ ಹಾಗೂ ಗ್ರಾಹಕಪರ ವಲಯಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.
“ಗ್ರಾಹಕರ ಹಕ್ಕುಗಳ ರಕ್ಷಣೆ ಮತ್ತು ಜನರಲ್ಲಿ ಗ್ರಾಹಕ ಜಾಗೃತಿ ಮೂಡಿಸುವುದು ನಮ್ಮ ಪ್ರಮುಖ ಆದ್ಯತೆ. ಕರ್ನಾಟಕದಾದ್ಯಂತ ಸಂಘಟನೆಯನ್ನು ಬಲಪಡಿಸಿ, ಪ್ರತಿಯೊಬ್ಬ ಗ್ರಾಹಕರಿಗೂ ತಮ್ಮ ಹಕ್ಕುಗಳ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು” ಎಂದು ಯೋಗಿಶ್ ಶೆಟ್ಟಿ ತಿಳಿಸಿದ್ದಾರೆ.
