ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26 ನೇ ಸಾಲಿನಲ್ಲಿ ಒಟ್ಟು 720.47 ಕೋ.ರೂ. ವ್ಯವಹಾರ ನಡೆಸಿ , 2,19,28,344.49 ಕೋ.ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ತಿಳಿಸಿದ್ದಾರೆ.
ಬುಧವಾರ ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿ ಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಹಾಗೂ ಬಂಟ್ವಾಳ ತಾಲೂಕಿನ 7 ಗ್ರಾಮಗಳನ್ನೊಳಗೊಂಡು 8 ಗ್ರಾಮಗಳ ವ್ಯಾಪ್ತಿಯನ್ನು ಸಂಘ ಹೊಂದಿದ್ದು, ಆಡಳಿತ ಮಂಡಳಿಯ ನಿರ್ದೇಶಕರ , ಸಿಬ್ಬಂದಿಗಳ ಹಾಗೂ ಸದಸ್ಯರ ಸಹಕಾರದಿಂದ ಕಳೆದ 79 ವರ್ಷಗಳಿಂದ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಅಭಿವೃದ್ದಿಯಲ್ಲಿ ಮುನ್ನಡೆಯುತ್ತಿದೆ ಎಂದರು .

ಸಂಘವು 2025-26 ನೇ ಸಾಲಿನಲ್ಲಿ ವಿವಿಧ ಉದ್ದೇಶಗಳಿಗೆ 133.63 ಕೋಟಿ ಸಾಲ ವಿತರಿಸಲಾಗಿದ್ದು, ಹೊರಬಾಕಿ ಸಾಲವು 133.63 ಕೋ.ರೂ.ಇದ್ದು,ವಿತರಿಸಲಾದ ಸಾಲದಲ್ಲಿ ಶೇ 98% ರಷ್ಟು ವಸೂಲಾತಿ ಸಾಧನೆ ಮಾಡಲಾಗಿದೆ ಎಂದ ಪ್ರಭು ಅವರು ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ 69.56 ಕೋ.ರೂ. ಠೇವಣಿ ಹೊಂದಿದೆ. ಅಡಿಟ್ ವರದಿಯಲ್ಲು “ಎ” ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬಂದಿದೆ ಎಂದರು.
ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ :
2025-26 ನೇ ಸಾಲಿನಲ್ಲಿ 1885 ರೈತರು 2395.78 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 62.62 ಲಕ್ಷ ರೂ. ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ಸಂಘದ ಸದಸ್ಯರು ಸುಮಾರು 5 ರಿಂದ 6 ಕೋಟಿ ಬೆಳೆವಿಮೆ ಪರಿಹಾರ ಪಡೆದಿದ್ದು, ನಮ್ಮ ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ಒಂದಾಗಿದೆ ಎಂದರು.
‘ರೈತ ಕಲ್ಯಾಣ ನಿಧಿ” ಯೋಜನೆ:
ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಅವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತ ಕಲ್ಯಾಣ ನಿಧಿ” ಯೋಜನೆಯ ಮೂಲಕ 10 ಸಾ.ರೂ.ವಿನಂತೆ 38 ಮಂದಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.
ಸಾಮಾಜಿಕ ಚಟುವಟಿಕೆ:
ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಸರಕಾರಿ ಸೇವೆಯಿಂದ ನಿವೃತ್ತರಾದವರಿಗೆ ಗೌರವಾರ್ಪಣೆ ಸಹಿತ ಸಂಘದ ಮೂಲಕ ಹಲವಾರು ಸಮಾಜಮುಖಿ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದರು.
ಸಂಘದಲ್ಲಿ ನ್ಯಾಯಬೆಲೆ ಅಂಗಡಿಯ ಮೂಲಕ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದ್ದು, “ನೇತಾಜಿ ಬಹುಪಯೋಗಿ ಸೇವಾಕೇಂದ್ರ”ದ ಹೆಸರಿನಲ್ಲಿ ನಿರ್ಮಾಣವಾದ ಗೋದಾಮು ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತುತ್ತು , ಸುಣ್ಣ ಸೇರಿದಂತೆ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆಯಲ್ಲದೆ ಕಡಿಮೆ ಬಡ್ಡಿದರದಲ್ಲಿ ರಾಸಾಯನಿಕ ಗೊಬ್ಬರ ಖರೀದಿಗೆ ಸಾಲ ನೀಡಲಾಗುತ್ತಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ವಿವರಿಸಿದರು.
ಸಂಘದ ಮಹಾಸಭೆ :
ಸಂಘದ 2025-26 ನೇ ಸಾಲಿನ ಮಹಾಸಭೆಯು ಸೆ. 19 ರಂದು ಬೆಳಿಗ್ಗೆ 10.00 ಕ್ಕೆ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಸಂದೇಶ್ ಶೆಟ್ಟಿ ಪೊಡುಂಬ,ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ , ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್ , ಎ ಶಿವ ಗೌಡ , ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ಕೀರ್ತಿರಾಜ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೆ , ನವೀನ್ ಹೆಗ್ಡೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ , ಸಹಾಯಕ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು.
