ಬಂಟ್ವಾಳ; ಜಿಲ್ಲೆಯ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪಶ್ಚಿಮವಾಹಿನಿ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಯ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪ್ಪಾಡಿ, ಚೈನ್ನೈತ್ತೋಡಿ , ರಾಯಿ. ಪಂಜಿಕಲ್ಲು ಹಾಗೂ ಅಮ್ಟಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ 16 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಪುಚ್ಚಮೊಗರುವಿನ ಪಲ್ಗುಣಿ ನದಿಕಿನಾರೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹರಿಯುವ ನದಿಗಳಿಗೆ ಅಲ್ಲಲ್ಲಿ ಚೆಕ್ ಡ್ಯಾಂ ಗಳ ನಿರ್ಮಿಸಿ, ನೀರನ್ನು ತಡೆಗಟ್ಟುವುದರ ಮೂಲಕ ಆಯಾ ಊರಿನ ಅಂತರ್ಜಲ ಮಟ್ಟ ವನ್ನು ಕಾಯ್ದುಕೊಳ್ಳುವುದು ಈ ಯೋಜನೆಯ ಉದ್ದೇಶ ಎಂದ ಅವರು, ಕೃಷಿಕರಿಗೂ ಇದರಿಂದ ಹೆಚ್ಚು ಪ್ರಯೋಜನವಾಗುವುದು ಎಂದರು.
ಜಿಲ್ಲೆಗೆ ಈ ಯೋಜನೆಯ ಅಗತ್ಯವಿದ್ದು, ರಾಜ್ಯದ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭೀವೃದ್ದಿ ಸಚಿವರ ಜೊತೆಯಲ್ಲಿ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ. ಇಲ್ಲಿನ ವಾಸ್ತವಂಶಗಳನ್ನು ಇನ್ನೂ ಮನದಟ್ಟು ಮಾಡಿಸುವ ನಿಟ್ಟಿನಲ್ಲಿ ಪಶ್ಚಿಮ ವಾಹಿನಿಯ ಜೊತೆಯಲ್ಲಿ ಜಿಲ್ಲೆಯಲ್ಲಿ ಆಗ ಬೇಕಿರುವ ಕುಡಿಯುವ ನೀರಿನ ಇನ್ನೂ 20 ಯೋಜನೆಗಳ ಕುರಿತಾಗಿ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವನ್ನು ಮುಖ್ಯಮಂತ್ರಿಯವರ ಬಳಿ ಕರೆದೊಯ್ಯಲಾಗುವುದು, ಈ ಬಾರಿಯ ಬಜೆಟ್ ನಲ್ಲಿ ಇದಕ್ಕೆ ವಿಶೇಷ ಅನುದಾನ ಮೀಸಲಿಡಲು ಒತ್ತಾಯಿಸುವುದಾಗಿ ಅವರು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಬಂಟ್ವಾಳದ ಕುಡಿಯುವ ನೀರಿನ ಸಮಸ್ಯೆ ಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಮಾನಾಥ ರೈ ಯವರು ಇಚ್ಛಾಶಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಬಂಟ್ವಾಳದ ಸರಣಿ ಬಹುಗ್ರಾಮ ಯೋಜನೆಗಳೇ ಸಾಕ್ಷಿ ಎಂದರು. ಎಲ್ಲಾ ವರ್ಗದವರ ಮೂಲಭೂತ ಅವಶ್ಯಕತೆಗಳಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಮುಖ್ಯವಾಗಿದ್ದು ಬಂಟ್ವಾಳ ಕ್ಷೇತ್ರದಲ್ಲಿ ಇದಕ್ಕೆ ಚ್ಚಿನ ಆದ್ಯತೆ ನೀಡಿರುವುದನ್ನು ಶ್ಲಾಘಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ ಮಾತನಾಡಿ, ಅಂತರ್ಜಲದ ರಕ್ಷಣೆಗೆ ಪೂರಕವಾಗಿ ಜಿಲ್ಲೆಯ ಹಲವೆಡೆಗಳಲ್ಲಿ ಕಟ್ಟಲಾಗಿದ್ದು ವೆಂಟೆಡ್ ಡ್ಯಾಂ ಗಳು ಶಿಥಿಲಾವಸ್ಥೆಯಲ್ಲಿದ್ದು, ಇವುಗಳ ದುರಸ್ಥಿಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ನೀರಿಂಗಿಸುವ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಬೇಕೆಂದು ಅವರು ಸಚಿವರಲ್ಲಿ ಮನವಿ ಮಾಡಿದರು



